ರಾಯಚೂರು: ವಸತಿ ಕಾರ್ಮಿಕರ ಸಂಖ್ಯೆ ಕಡಿತಗೊಳಿಸಲು ಸರ್ಕಾರ ಹೊರಡಿಸಿರುವ ಆದೇಶ ಹಿಂಪಡೆಯುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆಗೆ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಶುಕ್ರವಾರ ಮನವಿ ಸಲ್ಲಿಸಿತು.
ಸಮಾಜ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಬೇಕು ಎಂಬ ಆದೇಶವಿದೆ. ಸುಮಾರು ವರ್ಷಗಳಿಂದ ಕನಿಷ್ಠ ವೇತನದಲ್ಲಿ ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರು ಸೇರಿ ಅನೇಕರು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲಾಖೆಯ ಆದೇಶದಿಂದ ಹಾಸ್ಟೆಲ್ ಕಾರ್ಮಿಕರಿಗೆ ಅನ್ಯಾಯವಾಗಲಿದೆ ಎಂದು ದೂರಿದರು.
ಇಪಿಎಫ್, ಇಎಸ್ಐ ಹಾಗೂ ಇತರ ಸೌಲಭ್ಯಗಳಿಲ್ಲದೆ ಕಾರ್ಮಿಕರ ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಸ್ಟೆಲ್ಗಳಲ್ಲಿ ಅಡುಗೆ, ಸ್ವಚ್ಛತೆ, ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಿದ್ದಾರೆ. ಕಾರ್ಮಿಕರ ಪರಿಶ್ರಮ ಪರಿಗಣಿಸಿ, ಕೆಲಸದ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಆದೇಶ ಹೊರಡಿಸಿರುವುದು ಅಗತ್ಯವಾಗಿತ್ತು. ಆದರೆ ಸರ್ಕಾರ ಕಾರ್ಮಿಕರನ್ನು ಕಡಿಮೆ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ದ್ವಿತೀಯ ಪಿಯುಸಿ ಸಾಧಕಗೆ ಸಮಾಜ ಕಲ್ಯಾಣ ಇಲಾಖೆ ಸನ್ಮಾನ