ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರು ಭಾಗವಹಿಸುವುದಿಲ್ಲ.
ಹೀಗೆಂದು ಕಾಂಗ್ರೆಸ್ ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರುವುದಕ್ಕೆ ಕಾಂಗ್ರೆಸ್ ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದೊಡ್ಡಿದೆ. ಮೊದಲನೆಯದ್ದು, ಆರೆಸ್ಸೆಸ್/ಬಿಜೆಪಿಯು ರಾಮ ಮಂದಿರವನ್ನು ರಾಜಕೀಯ ಯೋಜನೆಯನ್ನಾಗಿ ಮಾಡಿಕೊಂಡಿದೆ ಎಂಬುದು. ಎರಡನೆಯ ಕಾರಣವೆಂದರೆ ದೇವಾಲಯವು ಪೂರ್ಣವಾಗಿಲ್ಲ ಎಂಬುದು. ಮೂರನೆಯದ್ದಾಗಿ, ಚುನಾವಣಾ ಲಾಭಕ್ಕಾಗಿ ಉದ್ಘಾಟನೆಯನ್ನು ಮುಂಚಿತವಾಗಿಯೇ ಮಾಡಲಾಗುತ್ತಿದೆ ಎಂಬುದು.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭವನ್ನು ಆರ್ಎಸ್ಎಸ್/ಬಿಜೆಪಿ ಕಾರ್ಯಕ್ರಮ ಎಂದು ಹೇಳಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಯೋಧ್ಯೆಯಲ್ಲಿ ದೇವಸ್ಥಾನದ ರಾಜಕೀಯ ಯೋಜನೆಯನ್ನು ಬಹಳ ಹಿಂದಿನಿಂದಲೂ ಮಾಡುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.
“ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ, ಧರ್ಮವು ವೈಯಕ್ತಿಕ ವಿಷಯವಾಗಿದೆ, ಆದರೆ, ಆರ್ಎಸ್ಎಸ್/ಬಿಜೆಪಿಯು ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಬಹಳ ಹಿಂದಿನಿಂದಲೂ ಮಾಡುತ್ತಿದೆ. ನಿಸ್ಸಂಶಯವಾಗಿ ಚುನಾವಣಾ ಲಾಭದ ಉದ್ದೇಶಕ್ಕಾಗಿ ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆ ಮಾಡುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.
“2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧವಾಗಿದ್ದು, ಭಗವಾನ ರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವ ಈ ಸಂದರ್ಭದಲ್ಲಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರೆಸ್ಸೆಸ್/ಬಿಜೆಪಿ ಕಾರ್ಯಕ್ರಮಕ್ಕೆ ಆಹ್ವಾನವನ್ನು ಗೌರವಯುತವಾಗಿ ನಿರಾಕರಿಸಿದ್ದಾರೆ” ಎಂದು ಪ್ರಕಟಣೆ ಹೇಳಿದೆ.
“ಕಳೆದ ತಿಂಗಳು, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಹಾಜರಾಗಲು ಆಹ್ವಾನವನ್ನು ನೀಡಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್: 3 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು
ಭಾರತವಾಗಲಿದೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆ: ಮುಕೇಶ್ ಅಂಬಾನಿ ಹೇಳಿದ್ದರ ಅರ್ಥವೇನು?