ಉಡುಪಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಬಿಜೆಪಿ ಜಿಲ್ಲಾಧ್ಯಕ್ಷರೊಂದಿಗೆ ಆನ್ಲೈನ್ ಸಂವಾದ ನಡೆಸಿ, ಆಯಾ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಜನರ ಸ್ಪಂದನೆಯ ಮಾಹಿತಿ ಪಡೆದರು.
ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ಸಂವಾದದಲ್ಲಿ ಭಾಗವಹಿಸಿ, ಶಂಕರಪುರ ಮಲ್ಲಿಗೆ ಬೆಳೆಗಾರರಿಗೆ ಹಾಗೂ ಸೇವಂತಿಗೆ ಬೆಳೆಗಾರರಿಗೆ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದರು. ಪ್ರತಿಕ್ರಿಯಿಸಿದ ಸಿಎಂ, ಈಗಾಗಲೇ ಹೂ ಬೆಳೆಗಾರರಿಗೆ ಗರಿಷ್ಠ ಒಂದು ಹೆಕ್ಟೇರ್ಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ಲ್ಲಿಗೆ ಬೆಳೆಗಾರರಿಗೂ ಇದು ಅನ್ವಯ. ಜಿಲ್ಲಾಧಿಕಾರಿ ಜತೆ ಮಾತನಾಡಿ ಪರಿಹಾರ ದೊರಕಿಸಿ ಕೊಡಿ ಎಂದರು. ಈ ಹಿಂದಿನ ಪ್ಯಾಕೆಜ್ನಲ್ಲಿ ಬಿಟ್ಟುಹೋಗಿರುವ ಅಸಂಘಟಿತ ಕಾರ್ಮಿಕರಿಗೆ ಮುಂದಿನ 2 ದಿನಗಳಲ್ಲಿ ಹೊಸ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದರು.
ಸಾರಿಗೆ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ಸುರೇಶ್ ನಾಯಕ್ ಮನವಿ ಮಾಡಿದರು.
ಈ ಬಗ್ಗೆ ಹಣಕಾಸು ಇಲಾಖೆ ಜತೆಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು. ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್ ಉಪಸ್ಥಿತರಿದ್ದರು.