ಬೆಂಗಳೂರು: ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೊರತೆಯಿರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ವಿಶೇಷ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ‘‘ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪರಿಸ್ಥಿತಿ ಉತ್ತಮ ಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿಶೇಷ ಗಮನ ಹರಿಸಬೇಕು’’ ಎಂದು ಸೂಚಿಸಿದ್ದಕ್ಕೆ ಸಚಿವ ಸುರೇಶ್ಕುಮಾರ್ ಪ್ರತಿಕ್ರಿಯಿಸಿ ಈ ವಿಷಯ ತಿಳಿಸಿದರು.
ಶಿಕ್ಷಣ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಸಮವಸ್ತ್ರ, ಪಠ್ಯಪುಸ್ತಕ, ಆರ್.ಟಿ.ಇ. ಮರುಪಾವತಿಯಂತಹ ಪ್ರಮುಖ ಯೋಜನಾ ಕಾರ್ಯಕ್ರಮಗಳಿಗೆ ಒದಗಿಸಲಾಗಿರುವ 2362 ಕೋಟಿ ರೂ.ಗಳನ್ನು ಅತಿ ಆದ್ಯತೆಯ ವಲಯಕ್ಕೆ ನೀಡಬೇಕಾಗಿರುವ ಕಾರಣ ಯಾವುದೇ ಕಡಿತ ಮಾಡಬಾರದು ಎಂದು ಸುರೇಶ್ಕುಮಾರ್ ಮನವಿ ಮಾಡಿದರು.
ಇದನ್ನೂ ಓದಿ ಅಂಫಾನ್ ಚಂಡಮಾರುತಕ್ಕೆ ಬುಡ ಸಮೇತ ಉರುಳಿದ 270 ವರ್ಷದ ಬೃಹತ್ ಆಲದ ಮರ
ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಸಬಲೀಕರಣಗೊಳಿಸುವ ಉದ್ದೇಶದಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಪೂರ್ವಭಾವಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದರು.
ವಲಸೆ ಬಂದ ಹಾಗೂ ಮನೆ ತೊರೆದು ಬಂದ ಮಕ್ಕಳಿಗೆ ಶಿಕ್ಷಣ ಕಾಯ್ದೆಯಡಿಯಲ್ಲಿ ವಿಶೇಷ ನೀತಿ ನಿರೂಪಣೆಗೆ ಇಲಾಖೆ ಈಗಾಗಲೇ ಕ್ರಮ ವಹಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ಥಳೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಗತ್ಯಗಳಿಗೆ ಒಗ್ಗುವ ರೀತಿಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸುವ ಕುರಿತಂತೆ ಶಿಕ್ಷಣ ಇಲಾಖೆ ಈಗಾಗಲೇ ತಜ್ಞರ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಶಿಕ್ಷಣ ನೀತಿ ಹೊರತರಲಾಗುವುದು ಎಂದರು.