ಬೆಂಗಳೂರು: ನವದೆಹಲಿಯ ನಿಜಾಮುದ್ದೀನ್ನಲ್ಲಿ ತಬ್ಲಿಗಿ ಜಮಾತ್ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ ಜನರು ಕರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹುಡುಕಿ, 14 ದಿನಗಳ ಕ್ವಾರಂಟೇನ್ನಲ್ಲಿ ಇರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅವರೆಲ್ಲರ ಪತ್ತೆಗಾಗಿ ರಾಜ್ಯಮಟ್ಟದ ವಿಶೇಷ ತಂಡ ರಚಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಪಾಲ್ಗೊಂಡಿದ್ದ ಶಿರಾ ತಾಲೂಕಿನ ವ್ಯಕ್ತಿಯೊಬ್ಬರು ಕರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಲ್ಲದೆ, ತಮಿಳುನಾಡಿನಲ್ಲಿ 45ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ.
ಒಂದು ಮಾಹಿತಿಯ ಪ್ರಕಾರ ವಿವಿಧ ದೇಶಗಳಿಂದ ಬಂದಿದ್ದ ಜಮಾತಿಗಳು ಪಾಲ್ಗೊಂಡಿದ್ದ ಧಾರ್ಮಿಕ ಸಭೆಯಲ್ಲಿ ರಾಜ್ಯದ 62 ಜನರು ಪಾಲ್ಗೊಂಡಿರುವ ಮಾಹಿತಿ ಇದೆ. ಇವರಲ್ಲಿ 12 ಜನರು ಮರಳಿದ್ದಾರೆ. ಇನ್ನು 50 ಜನರನ್ನು ಕ್ವಾರಂಟೇನ್ನಲ್ಲಿ ಇರಿಸಲಾಗಿದೆ. ಇದಲ್ಲದೆ, ರಾಜ್ಯದ ಇನ್ನೂ 300ಕ್ಕೂ ಹೆಚ್ಚು ಜನರು ಈ ಸಭೆಯಲ್ಲಿ ಪಾಲ್ಗೊಂಡಿರುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಅವರೆಲ್ಲರನ್ನೂ ಪತ್ತೆ ಮಾಡಿ, ಕ್ವಾರಂಟೇನ್ನಲ್ಲಿಡಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.