ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ, ಸಾಮರಸ್ಯದ ಬದುಕನ್ನು ಕಲಿಸುವುದರ ಜತೆಗೆ ಹೋರಾಟ ಮನೋಭಾವ ಮೈಗೂಡಿಸಿಕೊಳ್ಳಲು ಸಹಕಾರಿ. ಇದೇ ಮೊದಲ ಬಾರಿಗೆ ಇಂಥ ಕ್ರೀಡಾಕೂಟ ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಏರ್ಪಡಿಸುವ ಉದ್ದೇಶವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ನ ದ.ಕ. ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ.ಮೋಹನ್ ಆಳ್ವ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಸ್ವರಾಜ್ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ.ಮೊಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್, ಜಿಲ್ಲಾ ಕೋಶಾಧಿಕಾರಿ ನವೀನ್ಚಂದ್ರ ಅಂಬೂರಿ, ಜಿಲ್ಲಾ ಜಂಟಿ ಕಾರ್ಯದರ್ಶಿ ಜಯವಂತಿ ಸೋನ್ಸ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ರಾಜ್ ಕೆ., ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ಭಾರತಿ ನಾಯಕ್ ಉಪಸ್ಥಿತರಿದ್ದರು.
ಮೊದಲ ಬಾರಿಗೆ ನಡೆದ ಈ ಕ್ರೀಡಾಕೂಟದಲ್ಲಿ ಒಂದರಿಂದ ನಾಲ್ಕನೇ ತರಗತಿಯ ಕಬ್ಸ್ ಮತ್ತು ಬುಲ್ಬುಲ್ನ 124 ವಿದ್ಯಾರ್ಥಿಗಳು, ಐದನೇ ತರಗತಿಯಿಂದ ಹತ್ತನೇ ತರಗತಿಯ ಸ್ಕೌಟ್ಸ್ ಮತ್ತು ಗೈಡ್ಸ್ನ 1,755 ವಿದ್ಯಾರ್ಥಿಗಳು, ಪದವಿಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ನ 402 ವಿದ್ಯಾರ್ಥಿಗಳು ಒಟ್ಟು 2,281 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ವೈಯಕ್ತಿಕ ಏಳು ಗುಂಪು ಕ್ರೀಡೆಗಳು ಜರುಗಿದವು.