ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್ ಹೆಸರು ಇತ್ತು. ಆದರೆ, ಅಂತಿಮ ಕ್ಷಣದಲ್ಲಿ ಕೈ ಬಿಡಲಾಗಿದೆ. ಯಾವ ಕಾರಣಕ್ಕೆ ಕೈಬಿಟ್ಟಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿದರು.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ಅವರ ಹೆಸರು ಅಂತಿಮವಾಗಿತ್ತು. ನಾಲ್ಕನೇ ಅಭ್ಯರ್ಥಿ ಹೆಸರು ಅಂತಿಮವಾಗಿರಲಿಲ್ಲ. ರಾಜ್ಯದಿಂದ ಯಾವುದೇ ಪಟ್ಟಿ ಕಳುಹಿಸಿದರೂ ಪಕ್ಷದ ರಾಷ್ಟ್ರೀಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ಏತಕ್ಕಾಗಿ ವಿಶ್ವನಾಥ್ ಅವರಿಗೆ ಅವಕಾಶ ಕೈ ತಪ್ಪಿದೆ ಎಂಬುದು ಗೊತ್ತಿಲ್ಲ ಎಂದರು.
ಇದನ್ನೂ ಓದಿ: ಚೀನಾ ವಸ್ತು ಬಹಿಷ್ಕಾರಕ್ಕೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಸಿದ್ಧತೆ
ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭದ್ರವಾದ ಅಡಿಪಾಯ ಇಲ್ಲ. ಈ ಕಾರಣಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಬೇಡಿ ಎಂದು ಸಲಹೆ ನೀಡಿದ್ದೆ. ಆದರೆ, ಅನಿವಾರ್ಯ ರಾಜಕೀಯ ಪರಿಸ್ಥಿತಿಯಲ್ಲಿ ಅವರು ಸ್ಪರ್ಧಿಸಿ ಸೋಲು ಅನುಭವಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ವಿಶ್ವನಾಥ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಎಲ್ಲ ಶಾಸಕರನ್ನು ಅವರು ಒಗ್ಗೂಡಿಸಿದ್ದರು. ಚುನಾವಣೆಯಲ್ಲಿ ಸೋಲು ಅನುಭವಿಸಿದ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ವಿಶ್ವನಾಥ್ ಅವರಿಗೂ ನೀಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.
ಅವಕಾಶ ಕೈತಪ್ಪಿದ ನಂತರ ವಿಶ್ವನಾಥ್ ಫೋನ್ ಮಾಡಿ ನನ್ನೊಂದಿಗೆ ಮಾತನಾಡಿದರು. ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚಿಂತನೆ ನಡೆಸೋಣ ಎಂದು ಸಲಹೆ ನೀಡಿದ್ದೇನೆ. ವಿಶ್ವನಾಥ್ ಜೆಡಿಎಸ್ ಸೇರುವ ಮುನ್ನ ಅವರಿಗೆ ಯಾವುದೇ ಅಧಿಕಾರ ಇರಲಿಲ್ಲ. ಹಾಗಾಗಿ ಈಗಲೂ ಅವರು ಹತಾಶರಾಗುವ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ: ಎತ್ತಿನಹೊಳೆ ಕಾಮಗಾರಿ ಮುಕ್ತಾಯ; ಏಪ್ರಿಲ್ ವೇಳೆಗೆ ನೀರು ಎತ್ತುವಳಿ
ಬಿಜೆಪಿ ಸೇರ್ಪಡೆಗೊಳ್ಳುವ ಮುನ್ನ ವಿಶ್ವನಾಥ್ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ನಡುವೆ ಸುದೀರ್ಘ ಮಾತುಕತೆ ನಡೆದಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆ ಪ್ರಕಾರ ನಡೆದುಕೊಳ್ಳಬೇಕೆಂದು ಯಡಿಯೂರಪ್ಪ ಅವರಿಗೆ ನಾನು ಈ ಹಿಂದೆ ನೆನಪಿಸಿದ್ದೆ. ಯಡಿಯೂರಪ್ಪ ಅವರೂ ಅವರ ಹೆಸರನ್ನು ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಹೈಕಮಾಂಡ್ ಕೈ ಬಿಟ್ಟಿದೆ. ಈ ಬಗ್ಗೆ ಮುಂದೆ ವಿಶ್ವನಾಥ್ ಹಾಗೂ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.