ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲೇಬೇಕೆಂದು ನಿರ್ಧರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಆರ್. ಅಯ್ಯರ್, ಬಿ.ಕೆ ಪ್ರಕಾಶ್ ಬಾಬು ಹಾಗೂ ವಿ.ಬಿ. ವಿಶ್ವನಾಥ್ ಅವರು ಸಚಿವ ಸುರೇಶ್ ಕುಮಾರ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಮಾತ್ರವೇ ಪರೀಕ್ಷೆಗಳನ್ನು ನಡೆಸುವ ಅಧಿಕಾರ ಮತ್ತು ಜವಾಬ್ದಾರಿಗಳಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸುವುದು ಸಚಿವ ಸುರೇಶ್ ಕುಮಾರ್ ಅವರ ಕೆಲಸವಲ್ಲ. ಇಷ್ಟಾದರೂ ಸಚಿವರು ಉದ್ದೇಶಪೂರ್ವಕವಾಗಿ ಮತ್ತು ಬಲವಂತದಿಂದ ಮೇ 18ರಂದು ಮಂಡಳಿ ಜತೆ ಸಭೆ ನಡೆಸಿ ಜೂ. 25ರಿಂದ ಜು. 4ರವರೆಗೆ ಪರೀಕ್ಷಾ ದಿನಾಂಕಗಳನ್ನು ನಿಗದಿ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಇದನ್ನೂ ಓದಿ: ಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್ ಲಾಕ್ಡೌನ್?
ಜೂ.17 ರಂದು ಇ-ಮೇಲ್ನಲ್ಲಿ, ಜೂ.18ರಂದು ನಗರ ಪೊಲೀಸ್ ಆಯುಕ್ತರು, ಕೇಂದ್ರ ವಿಭಾಗದ ಡಿಸಿಪಿ ಹಾಗೂ ಹಲಸೂರು ಗೇಟ್ ಠಾಣೆ ಪೊಲೀಸರಿಗೆ ಖುದ್ದು ದೂರು ನೀಡಲಾಗಿದೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 304 ಮತ್ತು 107 ರಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕೋರಲಾಗಿದೆ. ಆದರೆ, ದೂರು ಸ್ವೀಕರಿಸಿರುವ ಪೊಲೀಸರು ಈವರೆಗೆ ಎ್ಐಆರ್ ದಾಖಲಿಸಿಕೊಂಡಿಲ್ಲ. ಆದ್ದರಿಂದ, ನ್ಯಾಯಾಲಯ ಸಿಆರ್ಪಿಸಿ ಸೆಕ್ಷನ್ 156(3) ಅಡಿ ಅಧಿಕಾರ ಚಲಾಯಿಸಿ ಪೊಲೀಸರಿಗೆ ಎ್ಐಆರ್ ದಾಖಲಿಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.