ಚೆನ್ನೈ: ಲೋಕಸಬೆ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ (CAA)ಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಸಿಎಎ ಜಾರಿ ಸಂಬಂಧಿಸಿದಂತೆ ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ ಚರ್ಚೆ ವ್ಯಾಪಕವಾಗಿ ನಡೆಯುತ್ತಿದ್ದು, ಇದು ಅನಗತ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್, ನಾವು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ. ಇದು ಅಲ್ಪಸಂಖ್ಯಾತರು ಮತ್ತು ಶ್ರೀಲಂಕಾ ತಮಿಳರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಹರಿಯಾಣ ಮಾಜ ಸಿಎಂ ಮನೋಹರ್ ಲಾಲ್ ಖಟ್ಟರ್
ಪೌರತ್ವ ತಿದ್ದುಪಡಿ ಕಾಯ್ದೆಯು ಸಂಪೂರ್ಣವಾಗಿ ಅನಗತ್ಯವಾಗಿದೆ. ಇದಲ್ಲದೆ ಸಿಎಎಅನ್ನು ಕೇಂದ್ರ ಸರ್ಕಾರ ಕೂಡಲೇ ರದ್ದುಪಡಿಸಬೇಕು. ಹಾಗಾಗಿ ತಮಿಳುನಾಡಿನಲ್ಲಿ ಕಾಯ್ದೆ ಅನುಷ್ಠಾನಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ. ಭಾರತದ ಏಕತೆಗೆ ವಿರುದ್ಧವಾದ ಯಾವುದೇ ಕಾನೂನನ್ನು ರಾಜ್ಯವು ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ.
ಸಿಎಎ ಸಂವಿಧಾನದ ಮೂಲ ತತ್ವಗಳು ಮತ್ತು ಜನರ ಕಲ್ಯಾಣಕ್ಕೆ ವಿರುದ್ಧವಾಗಿವೆ. ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಜನರ ಗಮನವನ್ನು ಬೇರೆಡೆ ಸೆಳೆಯಲು ಸಿಎಎ ಜಾರಿ ಮಾಡಿದೆ. ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿ ಮಾಡಲಾಗಿದ್ದು, ಜನವಿರೋಧಿ ನೀತಿಗಳ ಬಗ್ಗೆ ನಾವು ಹೆಚ್ಚಾಗಿ ಚಿಂತಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.