ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಖೋತಾ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದರು.
ಬಜೆಟ್ ಮಂಡನೆ ಬೆನ್ನಲ್ಲೇ ಈಶ್ವರ ಖಂಡ್ರೆ, ಉಗ್ರಪ್ಪ, ಎಚ್.ರೇವಣ್ಣ ಅವರ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಕೇಂದ್ರದಿಂದ ನಮಗೆ ಬರಬೇಕಾದ ಪಾಲು ಬರುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಒಪ್ಪಿಕೊಂಡಿದ್ದಾರೆ. ಬಿಜೆಪಿಯ ತಪ್ಪು ಆರ್ಥಿಕ ನೀತಿಗಳೇ ಇದಕ್ಕೆ ಕಾರಣ ಎಂದು ದೂಷಿಸಿದರು.
ಕೇಂದ್ರದಿಂದ ಬರೀ ಕರ್ನಾಟಕಕ್ಕೆ ಮಾತ್ರವಲ್ಲ. ಕೇರಳ, ತಮಿಳುನಾಡು, ಆಂಧ್ರಪ್ರದೇಶಕ್ಕೂ ಅನ್ಯಾಯ ಆಗಿದೆ. ಗುಜರಾತ್ಗೆ ಲಾಭ ಆಗುತ್ತಿದೆ ಎಂದು ಆರೋಪಿಸಿದರು.
ಕಳೆದ ವರ್ಷದ ಬಜೆಟ್ಗೆ ಹೋಲಿಕೆ ಮಾಡಿದರೆ ಕೇವಲ 4 ಸಾವಿರ ಕೋಟಿ ರೂಪಾಯಿಯಷ್ಟು ಗಾತ್ರ ಜಾಸ್ತಿಯಾಗಿದೆ. ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದ್ದೇವೆಂದು ಇದರಲ್ಲೇ ಗೊತ್ತಾಗುತ್ತದೆ. ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಹೋರಾಟ ಮಾಡಬೇಕು. ರಾಜ್ಯಕ್ಕೆ ಅನ್ಯಾಯ ಆಗದಂತೆ ಎಚ್ಚರ ವಹಿಸಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಬಜೆಟ್ನಲ್ಲಿ ಕೃಷಿ ವಲಯಕ್ಕೆ ಒತ್ತು ಕೊಟ್ಟಿಲ್ಲ. ನೀರಾವರಿಗೆ ಕಡಿಮೆ ಹಣ ನೀಡಿದ್ದಾರೆ. ಜಲಧಾರ ಯೋಜನೆಗೆ ಕೇವಲ 800 ಕೋಟಿ ರೂಪಾಯಿ ನೀಡಲಾಗಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಹಿಂದುಳಿದ ವರ್ಗಗಳಿಗೆ ಅನುದಾನ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದರು.
ದೆಹಲಿ ಮಾದರಿಯ ಶಾಲೆ ಮಾಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಆದರೆ ಹಣ ಎಲ್ಲಿಂದ ತರುತ್ತಾರೆ? ಬೆಂಗಳೂರಿಗೆ ಯಾವುದೇ ಹೊಸ ಯೋಜನೆ ಇಲ್ಲ. ಸಬ್ ಅರ್ಬನ್ ಯೋಜನೆಗೆ ಕೇಂದ್ರ ಸರ್ಕಾರ ಒಂದು ಕೋಟಿ ರೂಪಾಯಿ ನೀಡಿದೆ. ರಾಜ್ಯ ಸರ್ಕಾರ 50 ಕೋಟಿ ರೂ.ಕೊಟ್ಟಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಒಟ್ಟಾರೆ ಯಡಿಯೂರಪ್ಪ ಮಂಡಿಸಿದ್ದು, ಅವೈಜ್ಞಾನಿಕವಾಗಿದೆ ಎಂದರು.(ದಿಗ್ವಿಜಯ ನ್ಯೂಸ್)