ಶಿವಮೊಗ್ಗ: ಮಾ.5ರಂದು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದು ಸಿದ್ಧತೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು, ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಭಾಗವಹಿಸುತ್ತೇನೆ ಎಂದರು.
ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಆದರೆ ರೈತನ ಮಗನಾಗಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದರು.
ಮಂಗಳವಾರ ಹರ ಸಮಾವೇಶದಲ್ಲಿ ನಡೆದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಹರ ಸಮಾವೇಶದಲ್ಲಿ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ ಮಾತನಾಡುವ ವೇಳೆ, ಮುರುಗೇಶ್ ನಿರಾಣಿ ಅವರನ್ನು ಮಂತ್ರಿ ಮಾಡದಿದ್ದರೆ ಪಂಚಮಸಾಲಿ ಸಮಾಜ ನಿಮ್ಮ ಕೈ ಬಿಡಲಿದೆ ಎಂದು ಹೇಳಿದ್ದರು. ಶ್ರೀಗಳ ಮಾತಿನಿಂದ ಬೇಸರಗೊಂಡ ಸಿಎಂ, ಕಾರ್ಯಕ್ರಮದಿಂದ ನಿರ್ಗಮಿಸಲು ಎದ್ದು ನಿಂತಿದ್ದರು. ನಂತರ ಅವರನ್ನು ಶ್ರೀಗಳೇ ಸಮಾಧಾನಪಡಿಸಿ ಸಮಾಜ ನಿಮ್ಮೊಂದಿಗಿದೆ ಎಂದು ಹೇಳಿದ್ದರು.
——-
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಜ.18ರಂದು ರಾಜ್ಯಕ್ಕೆ ಆಗಮಿಸಲಿದ್ದು, ಅವರೊಂದಿಗೆ ಚರ್ಚೆ ಮಾಡಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡಲಾಗುವುದು
ಬಿ.ಎಸ್. ಯಡಿಯೂರಪ್ಪ, ಸಿಎಂ