ಮಸ್ಕಿ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಸರ್ಕಾರಿ ನೌಕರರ ಸಂಘದಿಂದ ಮನವಿ ಮಾಡಲಾಗಿತ್ತು. ಆದರೆ, ಸರ್ಕಾರ ಅಧಿವೇಶನದಲ್ಲಿ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ಸಮರ್ಪಕ ನಿರ್ಧಾರ ತೆಗೆದುಕೊಳ್ಳದ ಕಾರಣ ತಾಲೂಕಿನ ಎಲ್ಲ ಇಲಾಖೆಗಳ ಸಿಬ್ಬಂದಿ ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೇವೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಂಕರಗೌಡ ಪಾಟೀಲ ತಿಳಿಸಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲು ಶೇ.40 ಫಿಟ್ಮೆಂಟ್ ಸೌಲಭ್ಯ ಕೊಡಬೇಕು. ರಾಜ್ಯದಲ್ಲಿ ಎನ್ಪಿಎಸ್ ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿದ್ದು ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಸರ್ಕಾರ ಕೂಡಲೇ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ತಿಳಿಸಿದರು.
ಪದಾಧಿಕಾರಿಗಳಾದ ಮಲ್ಲಯ್ಯ ಕಟ್ಟಿಮನಿ, ಬಾಲಸ್ವಾಮಿ, ದಾವುದ್, ಪಂಪಾಪತಿ, ಚನ್ನವೀರ ಜೋತಾನ, ಈರಪ್ಪ, ಜ್ಯೋತಿಬಾಯಿ, ತಿಪ್ಪಣ್ಣ ಕೊಳ್ಳಿ, ಅಮರೇಶ, ಬಸನಗೌಡ, ಆಲಂಪಾಷಾ, ಶ್ರೀನಿವಾಸ, ಹುಸೇನ್ ಸಾಬ್ ಗುರಿಕಾರ ಇತರರು ಇದ್ದರು.