ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತ್ವರಿತ ನ್ಯಾಯಾಲಯವನ್ನು ರಚಿಸಿ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಬಗ್ಗೆ ಸರ್ಕಾರದ ಅಪಾರ ಮುಖ್ಯಕಾರ್ಯದರ್ಶಿಗೆ ಪತ್ರದ ಮುಖೇನ ಸೂಚಿಸಿರುವ ಸಿಎಂ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ತಮ್ಮದೇ ಸಾಮಾಜಿಕ ಹೋರಾಟಗಳನ್ನು ಮಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದರೂ, ಹತ್ಯೆಗೆ ಯಾರು ಸುಪಾರಿ ಕೊಟ್ಟಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎನ್ನುವ ಸತ್ಯಾಂಶ ತಿಳಿದುಬಂದಿಲ್ಲ.
ಪ್ರಕರಣದ ಹಿನ್ನಲೆ?
ಎಂಎಂ ಕಲಬುರ್ಗಿ ಅವರನ್ನು 2015 ಆಗಸ್ಟ್ 31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆದರೆ, ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಎಂಎಂ ಕಲಬುರ್ಗಿ ಪತ್ನಿ ಉಮಾದೇವಿ ಅವರು ಕೋರಿದ್ದು, ಈ ಸಂಬಂಧ ಜರೂರು ಅಗತ್ಯ ಕ್ರಮವಹಿಸಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: VIDEO| ಗೋಮೂತ್ರ ರಾಜ್ಯಗಳು ಹೇಳಿಕೆ; ವಿವಾದದ ಬಳಿಕ ಕ್ಷಮೆಯಾಚಿಸಿದ ಡಿಎಂಕೆ ಸಂಸದ
ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನು 2017, ಸೆಪ್ಟೆಂಬರ್ 05 ರಂದು ಗುಂಡಿಕ್ಕಿ ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ರವರು ಸರ್ಕಾರಕ್ಕೆ ಕೋರಿದ್ದು. ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸಿದ್ದರಾಮಯ್ಯ ಸೂಚಸಿ ಆದೇಶ ಹೊರಡಿಸಿದ್ದಾರೆ.