ಬೆಂಗಳೂರು: ರಾಜ್ಯದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ಸಹಕಾರ ಸಂಸ್ಥೆಗಳ ಮೂಲಕ ಪಡೆದ ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಬಡ್ಡಿಯನ್ನು ಮನ್ನಾ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಜನವರಿ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಮೇಲಿನ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಹಿನ್ನೆಲೆಯಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರ್ಕಾರ ಸುಸ್ತಿ ಸಾಲದ ಬಡ್ಡಿಯನ್ನು ಮನ್ನಾ ಮಾಡಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕ್ಗಳು, ಲ್ಯಾಂಪ್ಸ್ ಸೊಸೈಟಿಗಳು ಮತ್ತು ಪಿಕಾರ್ಡ್ ಬ್ಯಾಂಕ್ಗಳಿಂದ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಆಗಲಿದೆ.
ಈವರೆಗೂ ಸಹಕಾರ ಬ್ಯಾಂಕ್ಗಳಿಗೆ 92,525 ರೈತರ ಅಂದಾಜು 56011.03 ಲಕ್ಷ ರೂ.ಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಸುಸ್ತಿಯಾಗಿದೆ. ಇದರ ಮೇಲಿನ ಬಡ್ಡಿ ಬಾಬ್ತು ಅಂದಾಜು 46614.67 ಲಕ್ಷ ರೂ. ಆಗಿದ್ದು, ಈ ಹಣವನ್ನು ಸರ್ಕಾರ ಮನ್ನಾ ಮಾಡಿದೆ. ಆದರೆ, ಮಾರ್ಚ್ 31ರೊಳಗೆ ರೈತರು ಅಸಲು ಮರು ಪಾವತಿಸಿದಲ್ಲಿ ಬಡ್ಡಿ ಮನ್ನಾ ಆಗಲಿದೆ. (ದಿಗ್ವಿಜಯ ನ್ಯೂಸ್)