ತರೀಕೆರೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನೈಋತ್ಯ ಪದವೀಧರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರಮುಖರು ಮತ್ತು ಬಿಜೆಪಿ ಕಾರ್ಯಕರ್ತರು ಕಳೆದ ತಿಂಗಳಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಸಂಘಟನಾತ್ಮಕ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದು, ಎಂಎಲ್ಸಿ ಚುನಾವಣೆಯಲ್ಲೂ ಅದೇ ಹುರುಪಿನಿಂದ ಕೆಲಸ ಮಾಡುವ ವಿಶ್ವಾಸವಿದೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಬೇಕೆಂದು ಬಯಸಿರುವ ಕಾರ್ಯಕರ್ತರು ಎಂಎಲ್ಸಿ ಸೇರಿ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ವಿಧಾನ ಪರಿಷತ್ನ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಧನಂಜಯ ಸರ್ಜಿ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಗೆಲುವಿಗೆ ಪೂರಕ ವಾತಾವರಣವಿದ್ದು, ಈಗಾಗಲೇ ನೋಂದಣಿ ಮಾಡಿಕೊಂಡಿರುವ ಮತದಾರರನ್ನು ಸಂಪರ್ಕಿಸಿ ಇಬ್ಬರ ಗೆಲುವಿಗೆ ಪ್ರಯತ್ನ ನಡೆಸಬೇಕು ಎಂದು ಹೇಳಿದರು.
ಜಿಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ಆನಂದಪ್ಪ, ಜಿಲ್ಲಾ ಸಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಟಿ.ಎಲ್.ರಮೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ನರೇಂದ್ರ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ವಸಂತ್ಕುಮಾರ್, ಜೆಡಿಎಸ್ ಮುಖಂಡ ಶಿವಾನಂದ್, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಮತ್ತಿತರರಿದ್ದರು.
ಪದವೀಧರ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ
ತರೀಕೆರೆ ಬಿಜೆಪಿ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿದರು. ಕೆ.ಆರ್.ಆನಂದಪ್ಪ, ಟಿ.ಎಲ್.ರಮೇಶ್, ಎಂ.ನರೇಂದ್ರ, ಬಿ.ಎಸ್.ವಸಂತ್ಕುಮಾರ್, ಶಿವಾನಂದ್ ಇತರರಿದ್ದರು.