More

    ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದಿರಲಿ

    ನಾಪೋಕ್ಲು: ಮಕ್ಕಳಿಗೆ ಪಾಲಕರೇ ಮೊಬೈಲ್ ಕೊಡುತ್ತಿರುವುದು ದುರಂತ ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಬೇಸರ ವ್ಯಕ್ತಪಡಿಸಿದರು.


    ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.


    ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಮಕ್ಕಳು ಮೊಬೈಲ್ ಮೊರೆ ಹೋಗುತ್ತಿದ್ದಾರೆ. ಪಾಲಕರೇ ಕೊಡುತ್ತಿದ್ದಾರೆ. ತಂಟೆ ಮಾಡುವ ಮಕ್ಕಳನ್ನು ಸುಮ್ಮನಾಗಿರಿಸಲು, ಅಳುವ ಮಗುವನ್ನು ಸಮಾಧಾನ ಮಾಡಲು ಪಾಲಕರೇ ಮಕ್ಕಳ ಕೈಗೆ ಮೊಬೈಲ್ ಕೊಡುವ ಪರಿಸ್ಥಿತಿ. ಇದಕ್ಕೆ ಕಡಿವಾಣ ಹಾಕಬೇಕು. ಪರೀಕ್ಷೆಗಳು ಕಳೆದ ನಂತರ ಮಕ್ಕಳು ಸಮಯವನ್ನು ವ್ಯರ್ಥ ಮಾಡುವ ಬದಲು ಬೇಸಿಗೆ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಹವ್ಯಾಸಗಳನ್ನು ವೃದ್ಧಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.


    ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ನಂತರ ಬೇಸಿಗೆ ಶಿಬಿರಗಳನ್ನು ಆಯೋಜಿಸುವ ಪರಿಪಾಠ ವಿವಿಧೆಡೆ ನಡೆಯುತ್ತ ಬಂದಿದೆ. ಹಾಕಿ, ಕ್ರಿಕೆಟ್ ಸೇರಿದಂತೆ ಕ್ರೀಡಾ ಹಾಗೂ ವೃತ್ತಿಪರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಮುಖ್ಯ ಅಲ್ಲ. ಅದಕ್ಕಿಂತಲೂ ಮಿಗಿಲಾಗಿ ಮಕ್ಕಳಿಂದ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಪುಟ್ಟ ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಬಿರಗಳು ಅಗತ್ಯ. ಸ್ವತಂತ್ರವಾಗಿ ಬದುಕುವ ವ್ಯವಸ್ಥೆಯನ್ನು ಇಂತಹ ಶಿಬಿರದಲ್ಲಿ ಕಲಿಸಿಕೊಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆಶಯದೊಂದಿಗೆ ಮಕ್ಕಳ ಭವಿಷ್ಯ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿರುವ ಪೇರೂರಿಯನ್ ಕ್ಲಬ್ ಸದಸ್ಯರ ಕಾರ್ಯ ಶ್ಲಾಘನೀಯ ಎಂದರು.


    ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಬೆಂಗಳೂರಿನ ಉದ್ಯಮಿ ರವಿಕುಮಾರ್ ಮಾತನಾಡಿದರು.


    ಹಾಕಿ ಶಿಬಿರದ ಸಂಚಾಲಕ ತಾಪಂಡ ಅಪ್ಪಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಸದಸ್ಯ ಮಣವಟ್ಟಿರ ಹರೀಶ್ ಕುಶಾಲಪ್ಪ, ಮಚ್ಚುರ ರವೀಂದ್ರ, ನೆಲಜಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಜು ಅಪ್ಪಚ್ಚ, ಮೂವೆರ ನಾನಪ್ಪ, ಶಿಬಿರದ ಮುಖ್ಯ ತರಬೇತುದಾರರಾದ ಅಪ್ಪಚೆಟ್ಟೋಳಂಡ ಹರ್ಷಿತ್ ಅಯ್ಯಪ್ಪ, ಮುಕ್ಕಟ್ಟಿರ ಶಿಶಿರ್ ಮುತ್ತಪ್ಪ ಇತರರು ಇದ್ದರು. ಶಿಬಿರಾರ್ಥಿಗಳಿಗೆ ಗಣ್ಯರು ಅರ್ಹತಾ ಪತ್ರ ವಿತರಿಸಿ ಶುಭ ಹಾರೈಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts