ಮೈಸೂರು: ಪ್ರಕೃತಿ ವಿಕೋಪದ ಬೆಳೆ ನಷ್ಟಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು, ತುರ್ತಾಗಿ ಬರ ಪರಿಹಾರ ನೀಡಿ, ಗೋಶಾಲೆ ಆರಂಭಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಮೈಸೂರು-ನಂಜನಗೂಡು ರಸ್ತೆಯ ಎಪಿಎಂಸಿ ಜಂಕ್ಷನ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ರೈತರು ತೀವ್ರ ಬರಗಾಲದಿಂದ ತತ್ತರಿಸಿದ್ದಾರೆ. ಅಲ್ಲದೆ ಗಾಯದ ಮೇಲೆ ಬರೆ ಎಳೆದಂತೆ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಸುಮಾರು 1500 ಹೆಕ್ಟೇರ್ ಪ್ರದೇಶದಲ್ಲಿ ಬಾಳೆ ಬೆಳೆ ನಷ್ಟವಾಗಿದೆ. ಇದಕ್ಕೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿ ಬಾಳೆ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಭಾಗದಲ್ಲಿ ತೀವ್ರ ಬರಗಾಲವಿದ್ದು ಜಾನುವಾರುಗಳಿಗೆ ಮೇವು ಸಿಗದೆ ತೊಂದರೆಯಾಗಿದೆ. ಮೇವು ಕೇಂದ್ರಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೆರೆದು ಯಾವುದೇ ಷರತ್ತು ಇಲ್ಲದೆ ಮೇವು ಪೂರೈಸಬೇಕು ಎಂದು ಆಗ್ರಹಿಸಿದರು.