ಬೆಳಗಾವಿ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗರ್ಭಿಣಿಯರಿಗೆ, ಬಾಣಂತಿಯರಿಗೆ ಸರಿಯಾದ ರೀತಿಯಲ್ಲಿ ಯೋಜನೆಯ ಸೌಲಭ್ಯ ಕಲ್ಪಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ವಹಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಶಕ್ತಿ ಕೇಂದ್ರ ಯೋಜನೆ ಟ್ರಾನ್ಸ್ಜೆಂಡರ್ ಅವರ ಸಮನ್ವಯ ಮತ್ತು ಉಸ್ತುವಾರಿ ಸಮಿತಿ, ಪ್ರಧಾನ ಮಂತ್ರಿ ಯೋಜನೆ ಹಾಗೂ ಪೋಷಣ ಅಭಿಯಾನ ಯೋಜನೆಯ ಪ್ರಗತಿ ಪರಿಶೀಲನಾ ಮತ್ತು ಕುಂದು-ಕೊರತೆ ಪರಿಹಾರ ಸಮಿತಿಯ ಜಿಲ್ಲಾ ಮಟ್ಟದ ಸಮನ್ವಯ ಹಾಗೂ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಾಣಂತಿಯರಿಗೆ, ಗರ್ಭಿಣಿಯರಿಗೆ ಎಲ್ಲ ರೀತಿಯ ಸೌಲಭ್ಯಗಳು ಸಿಗಬೇಕು. ಅವರಲ್ಲಿ ಅಪೌಷ್ಟಿಕತೆ ಉಂಟಾಗದಂತೆ ಮೇಲಿಂದ ಮೇಲೆ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ಮಾಡಬೇಡಿ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ 2020 ಪೋಷಣಾ ಅಭಿಯಾನ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಅಪೌಷ್ಟಿಕತೆ ಮುಕ್ತ ಬೆಳಗಾವಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಮಾಡಿದ ಕಾರ್ಯ ಶ್ಲಾಘನೀಯ. ಎಲ್ಲಾ ಯೋಜನೆಗಳು ಜಿಲ್ಲೆಯ ಪ್ರತಿ ಹಳ್ಳಿಗಳಿಗೂ ತಲುಪುವ ಹಾಗೆ ಜಾಗೃತಿ ಮೂಡಿಸುವ ಕಾರ್ಯವನ್ನು ನಾವು ಮಾಡಬೇಕಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ ಮಾತನಾಡಿ, ಪೋಷಣ ಅಭಿಯಾನ ಯೋಜನೆಯು 6 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಪೌಷ್ಟಿಕತೆಯ ಸ್ಥಿತಿಯನ್ನು ನಿರ್ದಿಷ್ಟ ಅವಧಿಗೆ ಅನುಗುಣವಾಗಿ ಸುಧಾರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಿಜಯ ದೇವರಾಜ ಅರಸು ಮಾತನಾಡಿ, ಕೌಟುಂಬಿಕ ಕಲಹಗಳು ಬಗೆಹರಿಸಲು ಈ ಸಮಿತಿಯು ಫೆ.27ರಂದು ನಡೆಯಲಿರುವ ಲೋಕಅದಾಲತ್ನಲ್ಲಿ ಭಾಗವಹಿಸಿ ಕೌಟುಂಬಿಕ ಕಲಹಗಳನ್ನು ಬಗೆಹರಿಸಿಕೊಳ್ಳಬೇಕು. ಪ್ರಕರಣ ವಿಚಾರಣೆಗೆ ಸಂಬಂಧಪಟ್ಟ ವಕೀಲರು ಹಾಜರಾಗದಿದ್ದಲ್ಲಿ ವಕೀಲರನ್ನು ಬದಲಿಸಿ ಕೊಡಲಾಗುವುದು ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸಿ.ಬಿ.ಕೊಡ್ಲಿ, ಜಿಲ್ಲಾ ನಿರೂಪಣಾಧಿಕಾರಿ ನವಿನಕುಮಾರ.ಯು. ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.