ನವದೆಹಲಿ: ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇರಳದ ಕಾಸರಗೋಡಿನ ಜನರ ವೈದ್ಯಕೀಯ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.
ಮುಚ್ಚಿರುವ ಕಾಸರಗೋಡು-ಮಂಗಳೂರು ರಸ್ತೆಯನ್ನು ತೆರವುಗೊಳಿಸಿ ಕರೊನಾ ವೈರಸ್ ಸೋಂಕು ಪೀಡಿತರಿಗೆ ನೆರವಾಗಬೇಕು ಎಂದು ಗುರುವಾರ ಕೇರಳ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಆರೋಗ್ಯದ ವಿಚಾರವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ಕರೊನಾ ಪೀಡಿತರಿಗೆ ಚಿಕಿತ್ಸೆ ಸಿಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎರಡು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಬೇಕು ಎಂದು ಸೂಚಿಸಿ ಏ.7ಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು.
ಲಾಕ್ಡೌನ್ ನಂತರ ರಾಜ್ಯ ಸರ್ಕಾರ ಮಂಗಳೂರು ಹಾಗೂ ಕಾಸರಗೋಡು ರಸ್ತೆಯನ್ನು ಬಂದ್ ಮಾಡಿತು. ಕಾಸರಗೋಡಿನಲ್ಲಿ ಕರೊನಾ ಪೀಡಿತರ ಸಂಖ್ಯೆ ಅಧಿಕವಾಗಿರುವುದರಿಂದ ಹತ್ತಿರದ ಮಂಗಳೂರಿನಲ್ಲಿ ಚಿಕಿತ್ಸೆಗೆ ಮುಂದಾಗಿದ್ದರು. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ರೋಗಿಗಳು ಮಂಗಳೂರಿಗೆ ತೆರಳಲು ಸಾಧ್ಯವಾಗಲಿಲ್ಲ. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಚಿಕಿತ್ಸೆ ಸಿಗದೆ ಓರ್ವ ಸೋಂಕಿತ ಮೃತಪಟ್ಟಿದ್ದಾನೆ ಎಂದು ಕಾಸರಗೋಡು ಸಂಸದರು ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ರಸ್ತೆ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿದ್ದರು.
ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಮಂಗಳೂರು-ಕಾಸರಗೋಡು ರಸ್ತೆ ತೆರೆಯುವಂತೆ ಕರ್ನಾಟಕ್ಕೆ ಸೂಚನೆ ನೀಡಿತ್ತು.
ಕೇರಳ ಹೈಕೋರ್ಟ್ ಸೂಚನೆ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. (ಏಜೆನ್ಸೀಸ್)
VIDEO| ಮಾನವೀಯತೆ ಮರೆತ ಜನತೆ: ಕರೊನಾ ಸೋಂಕು ಇದ್ದ ಮಗುವಿಗೆ ಚಿಕಿತ್ಸೆ ಕೊಟ್ಟಿದ್ದಕ್ಕೆ ನರ್ಸ್ಗೆ ಬಹಿಷ್ಕಾರ