ಹನೂರು: ಪ್ರತಿ ವಾಹನವನ್ನು ತಪಾಸಣೆ ಮಾಡುವ ಮೂಲಕ ಚೆಕ್ಪೋಸ್ಟ್ನಲ್ಲಿ ಅಗತ್ಯ ಕಟ್ಟೆಚ್ಚರ ವಹಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ಸಹಾಯಕ ಚುನಾವಣಾಧಿಕಾರಿ ಮಲ್ಲಿಕಾರ್ಜುನ ತಿಳಿಸಿದರು.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ತಾಲೂಕಿನ ನಾಲ್ರೋಡ್ ಬಳಿ ತೆರೆದಿರುವ ಚೆಕ್ಪೋಸ್ಟ್ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಚೆಕ್ಪೋಸ್ಟ್ಗೆ ನಿಯೋಜನೆಗೊಂಡಿರುವ ಪ್ರತಿಯೊಬ್ಬರೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಈ ಮೂಲಕ ಮಾದರಿ ನೀತಿ ಸಂಹಿತೆಯನ್ನು ಪಾಲಿಸಬೇಕು. ಪ್ರತಿ ವಾಹನವನ್ನು ತಪಾಸಣೆ ಮಾಡಬೇಕು. ಈ ಸಂಬಂಧ ಅಗತ್ಯ ಮಾಹಿತಿಯನ್ನು ಪುಸ್ತಕದಲ್ಲಿ ನಮೂದಿಸುವುದರ ಜತೆಗೆ ವಿಡಿಯೋ ದಾಖಲಿಸಬೇಕು. ಒಂದು ವೇಳೆ ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.