ಶೃಂಗೇರಿ: ಸಮಾಜದ ಎಲ್ಲ ದುರ್ಬಲ ವರ್ಗದವರನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸುವುದು ಪಕ್ಷದ ಪ್ರಮುಖ ಧ್ಯೇಯ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸೋಮವಾರ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಉಮೇಶ್ಚಂದ್ರ ಬ್ಯಾನರ್ಜಿ, ದಾದಾಭಾಯಿ ನವರೋಜಿ ಮುಂತಾದ ನಾಯಕರು ಪಕ್ಷದ ಬೆಳವಣಿಗೆಗೆ ಅವಿರತವಾಗಿ ಶ್ರಮಿಸಿದ್ದರು ಎಂದರು.
1969ರಲ್ಲಿ ಬ್ಯಾಂಕ್ಗಳ ರಾಷ್ಟ್ರೀಕರಣ, ಗರೀಬಿ ಹಟಾವೋ, ಹಸಿರು ಕ್ರಾಂತಿ ಮೂಲಕ ಕೃಷಿಗೆ ಉತ್ತೇಜನ ಮುಂತಾದ ಜನಪರ ಕಾಳಜಿ ಕಾರ್ಯಕ್ರಮಗಳು ಇಂದಿಗೂ ಜನಪ್ರಿಯವಾಗಿವೆ. ಹಿರಿಯರ ಆದರ್ಶಗಳನ್ನು ಪಾಲಿಸಿ ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಬೇಕಿದೆ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ, ಸ್ವಾತಂತ್ರ್ಯಾನಂತರ ಕಾಂಗ್ರೆಸ್ 15 ಸಾರ್ವತ್ರಿಕ ಚುನಾವಣೆಯಲ್ಲಿ ಆರು ಬಾರಿ ಬಹುಮತದ ಜತೆಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದಿದೆ. ಪಕ್ಷ ಅನೇಕ ಜನಪರ ಯೋಜನೆ ಜಾರಿಗೆ ತಂದಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಅಭಿವೃದ್ಧಿಗೆ ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರನಕೂಡಿಗೆ ನಟರಾಜ್, ತಾಪಂ ಉಪಾಧ್ಯಕ್ಷೆ ಚಂದ್ರಮತಿ ತಿಮ್ಮಪ್ಪ, ಸದಸ್ಯ ಕೆ.ಆರ್.ವೆಂಕಟೇಶ್, ಮುಖಂಡ ಶಿವಮೂರ್ತಿ ಇದ್ದರು.