ಬೆಂಗಳೂರು: ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಈಗಿನ ಮುಖ್ಯಮಂತ್ರಿ ಎಷ್ಟು ಅವಧಿಗೆ ಸಿಎಂ ಆಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ಟೀಕೆಗೆ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ನಮ್ಮ ವಿರುದ್ಧ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ , ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶವೇ ದಿವಾಳಿಯಾಗಿದೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.
ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳು. 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಎಂದು ಸವಾಲು ಹಾಕಿದರು.
ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನ ಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇನ್ನೊಂದೆಡೆ ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ ಎಂದರು.