ತ್ಯಾಗರ್ತಿ: ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಲು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅದನ್ನು ಅನುಷ್ಠಾನಕ್ಕೆ ತರುವ ಕೆಲಸ ನಮ್ಮೆಲ್ಲರ ಮೂಲಕ ಆಗಬೇಕಾಗಿದೆ ಎಂದು ಆರ್ಥಿಕ ಸಾಕ್ಷರತಾ ಅಧಿಕಾರಿ ವಿ.ಪುಷ್ಪಾ ಹೇಳಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಉದ್ದೇಶದಿಂದ ತ್ಯಾಗರ್ತಿ ಹಾಗೂ ಹಿರೇಬಿಲಗುಂಜಿ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಶುಕ್ರವಾರ ಮಾತನಾಡಿದರು.
ದುರ್ಬಲರ ಏಳಿಗೆ, ಆಹಾರ ಭದ್ರತೆ, ಆರ್ಥಿಕ ಸದೃಢತೆ, ರೈತ ಕಲ್ಯಾಣ, ಡಿಜಿಟಲ್ ಇಂಡಿಯಾ, ಮೂಲ ಸೌಕರ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ, ಬೆಳೆ ವಿಮೆ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಸೇರಿದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ಇದರ ಮಾಹಿತಿ ಜನರಿಗೆ ತಲುಪಿಸುವ ಉದ್ದೇಶದಿಂದ ಈ ಯಾತ್ರೆ ದೇಶದಾದ್ಯಂತ ಸಂಚರಿಸುತ್ತಿದೆ ಎಂದು ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಸುಧಾ, ಕೃಷಿ ಇಲಾಖೆಯ ಸೌಲಭ್ಯಗಳನ್ನು ವಿವರಿಸಿದರು. ಕರ್ಣಾಟಕ ಗ್ರಾಮೀಣ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಷಣ್ಮುಖ ಪ್ರತಿಜ್ಞಾ ವಿಧಿ ಬೋಧಿಸಿದರು ಹಾಗೂ ಬ್ಯಾಂಕ್ ಮೂಲಕ ಸಿಗುವ ಸೌಲಭ್ಯಗಳನ್ನು ವಿವರಿಸಿದರು. ಇಂಡಿಯನ್ ಬ್ಯಾಂಕ್ ವ್ಯವಸ್ಥಾಪಕ ಸತೀಶ್, ಅಂಚೆ ಇಲಾಖೆಯ ಯಶೋಧಾ, ಆರೋಗ್ಯ ಹಾಗೂ ಆಶಾ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಅಶೋಕ್ ವಿವರಿಸಿದರು. ತ್ಯಾಗರ್ತಿ ಗ್ರಾಪಂ ಅಧ್ಯಕ್ಷೆ ಪ್ರಭಾವತಿ ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಡ್ರೋನ್ ಮೂಲಕ ಔಷಧ ಸಿಂಪಡಿಸುವ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಹಿರೇಬಿಲಗುಂಜಿ ಗ್ರಾಪಂ ಅಧ್ಯಕ್ಷ ನಾಗರಾಜ, ಸದಸ್ಯರಾದ ಇಸಾಕ್, ಗಿರೀಶ್, ಹನುಮಂತ, ಪರಶುರಾಮ, ಪಾರ್ವತಿ ಬೆನಕಪ್ಪ, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಹೊಸಂತೆ ಇತರರಿದ್ದರು.
ಮೇಘರಾಜ್ ಅಸಮಾಧಾನ
ವಿಕಸಿತ ಭಾರತ ಯಾತ್ರೆಗೆ ಗ್ರಾಪಂ ಅಧಿಕಾರಿಗಳು ಸರಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋಡಲ್ ಅಧಿಕಾರಿಗಳು ನಿಗದಿತ ಕಾರ್ಯಕ್ರಮದ ಬಗ್ಗೆ ಪಿಡಿಒಗೆ ಮೊದಲೇ ಮಾಹಿತಿ ನೀಡಿದ್ದರೂ ಕೇಂದ್ರ ಸರ್ಕಾರದ ಕಾರ್ಯಕ್ರಮಕ್ಕೂ, ನಮಗೂ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕರಿಗೆ, ಗ್ರಾಪಂ ಸದಸ್ಯರಿಗೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡುತ್ತಿಲ್ಲ ಎಂದು ತಾಪಂ ಇಒಗೆ ಕರೆ ಮಾಡಿ ದೂರಿದರು.