More

    ಶೀಘ್ರ ಹಾರಲಿವೆ ಲೋಹದ ಹಕ್ಕಿ

    ವಿಜಯಪುರ: ಐತಿಹಾಸಿಕ ಜಿಲ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದ್ದು, ಶೀಘ್ರದಲ್ಲಿಯೇ ವಿಮಾನ ಹಾರಾಟ ಆರಂಭಾಗಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ವಿಶ್ವಾಸ ವ್ಯಕ್ತಪಡಿಸಿದರು.

    ನಗರ ಹೊರವಲಯದ ಬುರಾಣಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಅವರು, ವಿಮಾನ ನಿಲ್ದಾಣವನ್ನು ಎಟಿಆರ್-72 ದಿಂದ ಏರ್‌ಬಸ್- 320 ವಿಮಾನಗಳ ಹಾರಾಟಕ್ಕಾಗಿ ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿದೆ. ಅದಕ್ಕಾಗಿ ಹೆಚ್ಚುವರಿಯಾಗಿ 127.29 ಕೋಟಿ ರೂ.ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರಕಿದೆ. ಈ ಎಲ್ಲ ತಾಂತ್ರಿಕ ಹಾಗೂ ಭೌತಿಕ ಕಾಮಗಾರಿಗಳು ಶೀಘ್ರದಲ್ಲಿ ಪೂರ್ಣಗೊಳ್ಳುವ ವಿಶ್ವಾಸ ಇದೆ ಎಂದರು.

    ಪ್ರವಾಸೋದ್ಯಮಕ್ಕೆ ಉತ್ತೇಜನ
    ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕಲಿದ್ದು, ಕೂಡಲಸಂಗಮ, ಆಲಮಟ್ಟಿ, ಕೊಲ್ಲಾಪುರ, ಸೊಲ್ಲಾಪುರ ಹೀಗೆ ಈ ಭಾಗದ ಪ್ರಸಿದ್ಧ ತಾಣಗಳಿಗೆ ಹೋಗಲು ಅನುಕೂಲವಾಗಲಿದೆ. ಈಗಾಗಲೇ ಈ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ಸಾಮಾನ್ಯ ಮನುಷ್ಯನು ವಿಮಾನದಲ್ಲಿ ಹಾರಾಟ ಮಾಡಬೇಕೆಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ ವಿಜಯಪುರ ಸೇರಿದಂತೆ ಶಿವಮೊಗ್ಗ, ಹಾಸನ, ರಾಯಚೂರು, ದಾವಣಗೆರೆ, ಕೊಪ್ಪಳ, ಬಳ್ಳಾರಿ ಹಾಗೂ ಕಾರವಾರ ಒಳಗೊಂಡು ರಾಜ್ಯದ 14 ಜಿಲ್ಲೆಗಳಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

    ಸೀ-ಪ್ಲೇನ್ ಯೋಜನೆ
    ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ ಮಾತನಾಡಿ, ಸೀ-ಪ್ಲೇನ್‌ಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಅದರನ್ವಯ ರಾಜ್ಯದಲ್ಲಿಯೂ ಈ ಮಾದರಿಯ ಸೀ-ಪ್ಲೇನ್‌ಗಳ ಹಾರಾಟದ ಮೂಲಕ ಸಾಹಸ ಪ್ರವಾಸೋದ್ಯಮ (ಅಡ್ವೆಂಚರ್ ಟೂರಿಸಂ) ಉತ್ತೇಜಿಸಲು ರಾಜ್ಯ ಸರ್ಕಾರ ಕಾರ್ಯಯೋಜನೆ ರೂಪಿಸುತ್ತಿದ್ದು, ಆಲಮಟ್ಟಿ ಜಲಾಶಯದಲ್ಲಿಯೂ ಸೀ-ಪ್ಲೇನ್ ಹಾರಾಟದ ಅವಕಾಶ ಕಲ್ಪಿಸಲು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕಾರ್ಯಕ್ಕೆ ಈ ವಿಮಾನ ನಿಲ್ದಾಣ ಪೂರಕವಾಗಲಿದೆ. ರಾಜ್ಯದ ಕಬನಿ, ಕೆಆರ್‌ಎಸ್, ಹಿಡಕಲ್ ಹಾಗೂ ಆಲಮಟ್ಟಿ ಜಲಾಶಯದಲ್ಲಿ ಸೀ-ಪ್ಲೇನ್ ಹಾರಾಟಕ್ಕೆ ಅವಕಾಶದ ಕುರಿತು ಸಮೀಕ್ಷೆ ನಡೆಸಲು ಈಗಾಗಲೇ ಕೆಎಸ್‌ಐಐಡಿಸಿ ಅಧ್ಯಯನ ನಡೆಸುತ್ತಿದೆ ಎಂದರು.

    ಡಿಸಿಯಿಂದ ಮಾಹಿತಿ
    ವಿಮಾನ ನಿಲ್ದಾಣದ ಭೌತಿಕ ಹಾಗೂ ತಾಂತ್ರಿಕ ಕಾಮಗಾರಿಗಳ ಪ್ರಗತಿಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮವರ, ವಿಜಯಪುರ ವಿಮಾನ ನಿಲ್ದಾಣದಲ್ಲಿ ಎಟಿಆರ್-72 ಮಾದರಿಯ ವಿಮಾನಗಳ ಹಾರಾಟಕ್ಕಾಗಿ 220 ಕೋಟಿ ರೂ.ಮಂಜೂರಾಗಿದ್ದು, ಎರಡು ಹಂತದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲನೇ ಹಂತದ ಕಾಮಗಾರಿಗಾಗಿ 95ಕೋಟಿ ರೂ. ಹಾಗೂ ಎರಡನೇ ಹಂತದ ಕಾಮಗಾರಿಗೆ 125 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಮೊದಲನೇ ಹಂತದ ಕಾಮಗಾರಿಯಲ್ಲಿ ಶೇ.64.75ರಷ್ಟು ಭೌತಿಕ ಹಾಗೂ 64.75 ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಎರಡನೇ ಹಂತದ ಸಿವಿಲ್ ಕಾಮಗಾರಿ ಭೌತಿಕ ಪ್ರಗತಿ ಶೇ.40.93ರಷ್ಟಾಗಿದ್ದು, ಆರ್ಥಿಕ ಪ್ರಗತಿ ಶೇ.40.93ರಷ್ಟು ಸಾಧಿಸಲಾಗಿದೆ ಎಂದರು.

    ಎರಡನೇಯ ಹಂತದ 125ಕೋಟಿ ರೂ.ಅನುದಾನವನ್ನು ಎರಡು ಉಪಕಾಮಗಾರಿಗಳಾಗಿ ವಿಂಗಡಿಸಿ 106 ಕೋಟಿ ರೂ.ಗಳ ವೆಚ್ಚದಲ್ಲಿ ಸಿವಿಲ್ ಕಾಮಗಾರಿ ಹಾಗೂ 19 ಕೋಟಿ ರೂ. ವೆಚ್ಚದಲ್ಲಿ ಏವಿಯೋನಿಕ್ಸ್, ಸೆಕ್ಯೂರಿಟಿ ಇಕ್ಯೂಪಮೆಂಟ್ಸ್ ಉಪಕಾಮಗಾರಿಗೆ ವಿಂಗಡನೆ ಮಾಡಲಾಗಿದೆ ಎಂದರು.

    ಎಸ್‌ಪಿ ಎಚ್.ಡಿ.ಆನಂದಕುಮಾರ, ಜಿಪಂ ಸಿಇಒ ರಾಹುಲ ಶಿಂಧೆ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಕಾರ್ಯಕಾರಿ ನಿರ್ದೇಶಕ ಡಿ.ಪಿ.ಪ್ರಕಾಶ, ಸೈನಿಕ ಶಾಲೆ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಭಿಷ್ಟ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜು ಮುಜುಂದಾರ, ಇ.ಬಿ.ಚಿಕ್ಕಲಕಿ, ಎಇ ರವಿ ಪವಾರ, ರೇವಣ್ಣ ಮಸಳಿ, ಹೈಡೆಕ್ ಪಿಎಂಸಿ ಜೋಸ್ ಥಾಮಸ್ ಮತ್ತಿತರರಿದ್ದರು.

    ಅಧಿಕಾರಿಗಳ ಸಭೆ
    ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿಮಾನ ನಿಲ್ದಾಣಕ್ಕೆ ದಿನದ ಇಪ್ಪತ್ನಾಲ್ಕು ಗಂಟೆ ನೀರು ಸರಬರಾಜು ಸೌಲಭ್ಯ ಪ್ರಗತಿಯಲ್ಲಿದ್ದು, 2000 ಕಿಲೋ ವ್ಯಾಟ್ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿ ತಾಂತ್ರಿಕ ಅನುಮೋದನೆ ಹಂತಲ್ಲಿದೆ. ಪರಿಷ್ಕೃತ ಅಂದಾಜು ಪತ್ರಿಕೆಯು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಂದ ಅನುಮೋದನೆಯಾಗಿದ್ದು, ಬೆಳಗಾವಿ ಮುಖ್ಯ ಅಭಿಯಂತರರಿಂದ ತಾಂತ್ರಿಕ ಅನುಮೋದನೆ ಪಡೆಯಬೇಕು. ಶೀಘ್ರದಲ್ಲೇ ಟೆಂಡರ್ ಆಹ್ವಾನಿಸಿ ಇತರೆ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

    ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಜಮೀನಿನ ಭೂಸ್ವಾಧೀನ ಕುರಿತು ಇಲಾಖೆಗಳು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ವಿಳಂಬ ಮಾಡದೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts