ಬೆಂಗಳೂರು: ರಾಷ್ಟ್ರೀಯ ಭದ್ರತೆ ಹಾಗೂ ಭಾರತೀಯರ ಸುರಕ್ಷತೆ ದೃಷ್ಟಿಯಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ಒಂದಾದ ಯೆಮೆನ್ಗೆ ಪ್ರವಾಸ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.
ಯೆಮೆನ್ಗೆ ತೆರಳಲು ಮುಂದಾಗಿರುವ ಕಾರಣಕ್ಕೆ ತನ್ನ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಂಡಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ನೆರಿಯಾ ನಿವಾಸಿ ಶೇನಿ ಜಾಯ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಭಾರತೀಯರು ಯೆಮೆನ್ಗೆ ಹೋಗುವುದನ್ನು ನಿಷೇಧಿಸಿ 2017ರಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಬಗ್ಗೆ ತನಗೆ ಮಾಹಿತಿ ಇಲ್ಲ. ಮಾಹಿತಿ ಕೊರತೆಯಿಂದ ಯೆಮನ್ಗೆ ತೆರಳಲು ಮುಂದಾಗಿದ್ದೆ. ಆದ ಕಾರಣ ಮುಟ್ಟುಗೋಲು ಹಾಕಿಕೊಂಡಿರುವ ಪಾಸ್ಪೋರ್ಟ್ ಮರಳಿ ನೀಡಬೇಕು ಎಂಬ ಅರ್ಜಿದಾರರ ಮನವಿ ಪರಿಶೀಲಿಸಿ ನಿಲುವು ತಿಳಿಸಬೇಕು ಎಂದು ಕೇಂದ್ರ ಸರ್ಕಾರದ ಉಪ ಸಾಲಿಸಿಟರ್ ಜನರಲ್ ಎಚ್.ಶಾಂತಿಭೂಷಣ್ಗೆ ನ್ಯಾಯಪೀಠ ಸೂಚಿಸಿದೆ.
ಅರ್ಜಿದಾರರು ಯೆಮೆನ್ನಲ್ಲಿ ನರ್ಸ್ ಆಗಿದ್ದು, 2014, 2020 ಮತ್ತು 2023ರಲ್ಲಿ ಭಾರತಕ್ಕೆ ಬಂದು ಹೋಗಿದ್ದಾರೆ. ಯೆಮೆನ್ ಪ್ರವಾಸ ಕೈಗೊಳ್ಳುವುದನ್ನು ನಿಷೇಧಿಸಿ ವಿದೇಶಾಂಗ ಸಚಿವಾಲಯವು 2017ರ ಸೆ. 26ರಂದು ಹೊರಡಿಸಿದ ಅಧಿಸೂಚನೆ ಬಗ್ಗೆ ಅರ್ಜಿದಾರರಿಗೆ ಮಾಹಿತಿ ಇಲ್ಲ. 2023ರ ಆ.20ರಂದು ಅರ್ಜಿದಾರರು ಯೆಮನ್ಗೆ ಹೋಗುತ್ತಿದ್ದಾಗ ದೆಹಲಿ ವಿಮಾನ ನಿಲ್ದಾಣದಲ್ಲಿ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಹೀಗಾಗಿ, ಪಾಸ್ಪೋರ್ಟ್ ಹಿಂದಿರುಗಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿದ್ದರು.