ಅಜ್ಜಂಪುರ: ತರೀಕೆರೆ ವಿಧಾನಸಭಾ ಕ್ಷೇತ್ರದ ಜನರ ಬೇಡಿಕೆಗಳನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಈಡೇರಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಹೇಳಿದರು.
ತಾಪಂ ಕಚೇರಿ ಕಟ್ಟಡದಲ್ಲಿ ಬುಧವಾರ ಶಾಸಕರ ಜನಸಂಪರ್ಕ ಕಚೇರಿ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ರೈತರು, ಕಾರ್ಮಿಕರು, ವಿದ್ಯಾರ್ಥಿಗಳ, ಮಹಿಳೆಯರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.
ಆರೋಗ್ಯ, ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಸರ್ಕಾರದ ಐದು ಭರವಸೆಗಳ ಪೈಕಿ ಮೂರು ಭರವಸೆಗಳನ್ನು ಈಡೇರಿಸಿದೆ. ಜಿಲ್ಲೆಯ ಶಾಸಕರು ಜನರಲ್ಲಿ ಆತ್ಮ ವಿಶ್ವಾಸ ಮೂಡಿಸುವರು. ಬಿಜೆಪಿ ಸರ್ಕಾರ ಜನಪರ ಯೋಜನೆಗಳನ್ನು ಜನರಿಗೆ ನೀಡಲಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಜವಾಬ್ದಾರಿ ಮರೆತು ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹೊಸ ತಾಲೂಕು ಸ್ಥಾಪನೆ ಆಗಿತ್ತು. ನಂತರ ಐದು ವರ್ಷಗಳಲ್ಲಿ ಅಭಿವೃದ್ಧಿ ಕಾಣಲಿಲ್ಲ. ವಾರಕ್ಕೊಮ್ಮೆ ಶಾಸಕರ ಜನಸಂಪರ್ಕ ಕಚೇರಿಗೆ ಆಗಮಿಸಿ ಈ ಭಾಗದ ಜನರ ಸಮಸ್ಯೆ ಬಗೆಹರಿಸಲಾಗುವುದು. ಅಮೃತಮಹಲ್ ಕಾವಲಿನಲ್ಲಿ 30 ಎಕರೆ ಜಾಗ ಪಡೆದು ಮಿನಿ ವಿಧಾನಸೌಧ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ನಿರಂತರ ಕುಡಿಯುವ ನೀರು, ಯುಜಿಡಿ, ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಂ.ಗುರುಮೂರ್ತಿ, ಅಜ್ಜಂಪುರ ಕಾಂಗ್ರೆಸ್ ಮುಖಂಡರು ಇದ್ದರು.