More

    ಗ್ರಾಮ ಸಭೆಯಲ್ಲಿ ಸಮಸ್ಯೆಗಳ ಸದ್ದು


    ಕೊಡಗು : ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯನ್ನು ಅಧ್ಯಕ್ಷ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ ಅಧ್ಯಕ್ಷತೆಯಲ್ಲಿ ಗುರುವಾರ ಹೊದ್ದೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.


    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಕೃತಿಕಾ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇದ್ದು, ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧ್ಯಕ್ಷರು ಸೂಚನೆ ನೀಡಿದರು.
    ವಿದ್ಯುತ್ ಸಮಸ್ಯೆ ಕುರಿತು ಸಸ್ಕ್ ಮುರ್ನಾಡು ಇಂಜಿನಿಯರ್ ಮಾಹಿತಿ ನೀಡಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಟಿಸಿಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ಸದಸ್ಯರಾದ ಹಮೀದ್ ಮೊನ್ನಪ್ಪ, ಟೈನಿ ಗಮನ ಸೆಳೆದರು.


    ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಕುರಿತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ರಘು ಮಾಹಿತಿ ನೀಡಿದರು. ಶಾಸಕ ಡಾ.ಮಂತರ್ ಗೌಡ ವಿಶೇಷ ಆಸಕ್ತಿಯಿಂದ ಹೊದ್ದೂರು ಗ್ರಾಮ ಪಂಚಾಯತಿಗೆ 1.70 ಕೋಟಿ. ರೂ. ಮೊತ್ತದ ವಿವಿಧ ರಸ್ತೆ ಕಾಮಗಾರಿಗಳು ಮಂಜೂರಾಗಿದೆ. ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಹಂಸ ಅವರು ಮಾಹಿತಿ ನೀಡಿದರು.


    ಹೊದ್ದೂರು ಕಬಡಕೇರಿ ಸರ್ವೇ ನಂ. 77/2 ಹಾಗೂ 88/1 ಆಶ್ರಯ ನಿವೇಶನ ಯೋಜನೆ ಅಡಿಯಲ್ಲಿ 60 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಕಂದಾಯ ಇಲಾಖೆಯ ಎಲ್ಲ ಕಾರ್ಯಗಳಿಗೂ ಉತ್ತಮವಾಗಿ ಸ್ಪಂದಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಪಾಟೀಲ್ ಅವರ ಕಾರ್ಯ ವೈಖರಿ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.


    ಪಂಚಾಯಿತಿ ವ್ಯಾಪ್ತಿಯ ಅನುದಾನ ರಹಿತ ಶಾಲೆಗಳ ಕಟ್ಟಡ ತೆರಿಗೆಯನ್ನು, ಬೇರೆ ಗ್ರಾಮ ಪಂಚಾಯಿತಿಗಳಿಗಿಂತಲೂ ಹೆಚ್ಚುವರಿಯಾಗಿ ವಿಧಿಸುತ್ತಿರುವ ಬಗ್ಗೆ ಗ್ರಾಮಸ್ಥರಾದ ಮೊಹಮ್ಮದ್ ಗಮನ ಸೆಳೆದರು. ಈ ಕುರಿತು ಪಿಡಿಒ ಅಬ್ದುಲ್ಲಾ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ತೆರಿಗೆ ನಿಯಮಾವಳಿಗಳ ಪ್ರಕಾರ ಈ ಹಿಂದಿನಂತೆ ತೆರಿಗೆ ವಸೂಲಿ ಮಾಡುತ್ತಿದ್ದು, ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ನಿಯಮ 202 ರ ಅನ್ವಯ ಮೇಲ್ಮನವಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಈ ಬಗ್ಗೆ ಮುಂದಿನ ಸಭೆಯಲ್ಲಿ ಪರಿಶೀಲಿಸಲಾಗುವುದು ಎಂದು ಅಧ್ಯಕ್ಷರು ಮಾಹಿತಿ ನೀಡಿದರು.


    ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಟೆಕಾಡು ಮತ್ತು ಹೊದವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಗೆ ಪೂರಕವಾಗಿರುವ ಸ್ಮಾರ್ಟ್ ಟಿವಿಯನ್ನು ಹಾಗೂ ಪಂಚಾಯಿತಿ ವ್ಯಾಪ್ತಿಯ 12 ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸ್ನೇಹಿ ಪೀಠೋಪಕರಣಗಳು ಹಾಗೂ ಅಂಗನವಾಡಿ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಗ್ರಾಮಸಭೆಯಲ್ಲಿ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts