ಆಲೂರು: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ತತ್ವಾದರ್ಶ ಮತ್ತು ಜೀವನದ ಸಾಧನೆಗಳು ಸ್ಫೂರ್ತಿದಾಯಕವಾಗಿದ್ದು, ಸಾಮಾಜಿಕ ಸಮಾನತೆ ಮತ್ತು ಅಸ್ಪೃಶ್ಯತಾ ನಿವಾರಣೆಗಾಗಿ ಮಾಡಿದ ಹೋರಾಟ ಅವಿಸ್ಮರಣೀಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನ ರಚಿಸಿದ ಅಂಬೇಡ್ಕರರು ಸಂವಿಧಾನ ಶಿಲ್ಪಿಯಾಗಿ ಹೊರ ಹೊಮ್ಮುವ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಜಾತಿ ಪದ್ಧತಿ ಬಿಟ್ಟು ನಾವೆಲ್ಲರೂ ಒಂದೇ ಎಂದು ಬದುಕಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಬಹುದು. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಅವಿರತ ಪರಿಶ್ರಮವನ್ನು ನಾವೆಂದೂ ಮರೆಯಬಾರದು ಎಂದು ತಿಳಿಸಿದರು.
ಚನ್ನರಾಯಪಟ್ಟಣ ಪಿಡಬ್ಲುೃಡಿ ಇಲಾಖೆಯ ಸಹಾಯಕ ಇಂಜಿನಿಯರ್ ಚಂದ್ರಶೇಖರ್ ಮಾತನಾಡಿ, ಅಂಬೇಡ್ಕರ್ ಅವರು ನೋವಿನಲ್ಲೂ ಭಾರತ ಮಾತೆಯ ಕಾವಲುಗಾರನಾಗಿ ಕೆಲಸ ಮಾಡುವ ಮೂಲಕ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸ್ಮರಿಸಿದರು.
ಪರಿಶಿಷ್ಟ ಜಾತಿ, ಪಂಗಡಗಳ ಹಿರಿಯ ಮುಖಂಡರು ಹಾಗೂ ಎಸ್ಎಸ್ಎಲ್ಸಿ-ಪಿಯುಸಿ ಹಾಗೂ ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾರೋಟಿನಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು.
ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ತಾಹೇರ ಬೇಗಂ, ತಹಸೀಲ್ದಾರ್ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ಪೊಲೀಸ್ ಇನ್ಸ್ಪೆಕ್ಟರ್ ಆರ್.ಎಂ ಮೋಹನ್ರೆಡ್ಡಿ, ದಲಿತ ಮುಖಂಡರಾದ ಬಸವರಾಜ್, ದೇವರಾಜ್, ಅರಸಪ್ಪ, ಅರಸಪ್ಪ, ರಂಗಯ್ಯ ಅಜ್ಜೇನಹಳ್ಳಿ ಮುಂತಾದವರು ಹಾಜರಿದ್ದರು.