ಮದ್ದೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋಡಿಹಳ್ಳಿ ಸಮೀಪ ಶನಿವಾರ ಬೆಳಗ್ಗೆ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರ ನಿವಾಸಿ ವಿನೋದ್ ಹಾಗೂ ಕಾರಿನ ಚಾಲಕ (ಹೆಸರು ತಿಳಿದು ಬಂದಿಲ್ಲ) ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿನೋದ್ ಆರ್.ಟಿ.ನಗರ ನಿವಾಸಿ ವಿನೋದ್ ಜ್ಯುವೆಲ್ಲರಿ ಶಾಪ್ ಮಾಲೀಕರಾಗಿದ್ದು, ಚಾಮರಾಜನಗರದ ಕನಕಗಿರಿ ಮಠಕ್ಕೆ ತೆರಳಿ ಪೀಠಾಧಿಪತಿಗಳ ಆಶೀರ್ವಾದ ಪಡೆದು ನಂತರ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದ್ದರು. ಕಾರು ಮದ್ದೂರಿನ ಕೋಡಿಹಳ್ಳಿಯ ಫ್ಲೈಓವರ್ ಇಳಿಯುತ್ತಿದ್ದಂತೆ ಟೈರ್ ಸ್ಫೋಟಗೊಂಡು 8 ರಿಂದ 9 ಬಾರಿ ಪಲ್ಟಿ ಹೊಡೆದು ನಂತರ ಡಿವೈಡರ್ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಕಾರು ಛಿದ್ರಗೊಂಡು ಅದರ ಭಾಗಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ತಕ್ಷಣವೇ ಹೆದ್ದಾರಿಯ ವಾಹನ ಸವಾರರು ಹಾಗೂ ಸ್ಥಳೀಯರು ಧಾವಿಸಿ ಕಾರಿನಲ್ಲಿದ್ದವರನ್ನು ಹೊರ ತೆಗೆದು ರಕ್ಷಿಸಿದ್ದು, ಸಣ್ಣಪುಟ್ಟ ಗಾಯಗಳಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಜೆ.ಇ.ಮಹೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.