ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ವೊಂದು ಕೆರೆಗೆ ಉರುಳಿದ ಘಟನೆ ಇಲ್ಲಿನ ಕೆಲಗೇರಿ ಕೆರೆಯಲ್ಲಿ ಬುಧವಾರ ಸಂಭವಿಸಿದೆ. ಟ್ರ್ಯಾಕ್ಟರ್ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಯಲ್ಲಿ ತೆರಳುತ್ತಿದ್ದ ವೃದ್ಧೆಗೆ ಡಿಕ್ಕಿ ಹೊಡೆದು ಕೆರೆಗೆ ಉರುಳಿದೆ. ಟ್ರ್ಯಾಕ್ಟರ್ ಕೆಳಗಡೆ ಸಿಲುಕಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿಲ್ಲ.