ಮದ್ದೂರು: ಸಮೀಪದ ಸೋಮನಹಳ್ಳಿಯ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಭಾನುವಾರ ರಾತ್ರಿ ದಾಳಿ ಮಾಡಿದ ಅಧಿಕಾರಿಗಳು, ಶಿಂಷಾನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಹಿಡಿದು ಪಟ್ಟಣದ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಲಾರಿ ಚಾಲಕ ಹಾಗೂ ಸಹಾಯಕ ಅಧಿಕಾರಿಗಳನ್ನು ಕಂಡು ಲಾರಿ ಬಿಟ್ಟು ಪರಾರಿಯಾಗಿದ್ದಾರೆ.
ತಾಲೂಕಿನ ಶಿಂಷಾನದಿ ಪಾತ್ರ ಹಾಗೂ ಕೂಳಗೆರೆಯಲ್ಲಿ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾದ ನಾಗೇಶ್, ಪ್ರಸನ್ನ, ಅರುಣ್ ದಾಳಿಯ ನೇತೃತ್ವ ವಹಿಸಿದ್ದರು.