ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಿಸುವುದಕ್ಕಿಂತಲೂ ಗುಣಮಟ್ಟದ ವೈದ್ಯರನ್ನು ಮತ್ತು ಆಸ್ಪತ್ರೆಗಳನ್ನು ಹೆಚ್ಚಿಸುವ ಅವಶ್ಯಕತೆ ಇದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯಪಟ್ಟರು.
ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ಗಾನಭಾರತಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನ ಮತ್ತು ಸಾಧಕ ವೈದ್ಯರಿಗೆ ‘ವೈದ್ಯಶ್ರೀ ಪ್ರಶಸ್ತಿ’ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ 700 ಮೆಡಿಕಲ್ ಕಾಲೇಜುಗಳಿವೆ. ಪ್ರತಿ ವರ್ಷದ ಒಂದು ಲಕ್ಷ ಎಂಬಿಬಿಎಸ್ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ರಾಜ್ಯದಲ್ಲೂ 65 ಮೆಡಿಕಲ್ ಕಾಲೇಜುಗಳಿವೆ. ಇದೇ ರೀತಿ ಮುಂದುವರಿದರೆ 2030ರ ವೇಳೆಗೆ ಕೆಲವು ಕಾಲೇಜುಗಳು ಮುಚ್ಚುತ್ತವೆ. ಆದ್ದರಿಂದ ವೈದ್ಯಕೀಯ ಕಾಲೇಜುಗಳನ್ನು ಹೆಚ್ಚಿಸುವುದಕಿಂತ ಗುಣಮಟ್ಟದ ವೈದ್ಯರನ್ನು ಹಾಗೂ ಆಸ್ಪತ್ರೆಗಳನ್ನು ಸೃಷ್ಟಿಸುವ ಅಗತ್ಯ ಇದೆ ಎಂದರು. ಚಿಕಿತ್ಸೆ ನೀಡುವುದಕ್ಕಿಂತಲೂ ಕಾಯಿಲೆ ಬಾರದಂತೆ ಸಮಾಜಕ್ಕೆ ಮಾರ್ಗದರ್ಶನ ನೀಡುವುದು ವೈದ್ಯರ ಕೆಲಸ ಎಂದರು.