ಗುಬ್ಬಿ : ಕರೊನಾ ಸಂಕಷ್ಟದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾರೋ ಎಲ್ಲಿಯೋ ಕುಳಿತು ಈ ಬಗ್ಗೆ ಮಾತನಾಡಿದರೆ ಅದನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ನಿಟ್ಟೂರಿನ ಶ್ರೀವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಾಸಿಟಿವ್ಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕೆಂಪು ವಲಯದಿಂದ ಹಳದಿ ವಲಯಕ್ಕೆ ಬಂದಿದೆ. ಜಿಲ್ಲೆಯಲ್ಲಿ 19 ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲಾಗಿದ್ದು, ಸೋಂಕಿತರನ್ನು ಉತ್ತಮ ಚಿಕಿತ್ಸಾ ಸೌಲಭ್ಯ ಸಿಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದರು. ಅಧಿಕಾರಿಗಳು ಲಾಕ್ಡೌನ್ ಅನ್ನು ಬಹಳ ಶಿಸ್ತಿನಿಂದ ಜಾರಿ ಮಾಡುತ್ತಿರುವುದರಿಂದ ಸೋಂಕು ಹತೋಟಿಗೆ ಬರುತ್ತಿದ್ದು, ಇನ್ನು 15 ದಿನಗಳಲ್ಲಿ ಇದರ ತೀವ್ರತೆ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ ಎಂದು ತಿಳಿಸಿದರು.
ಮನೆಗೆ ಬೆಂಕಿ ಬಿದ್ದಾಗ ಯಾರಾದರೂ ಮದುವೆ ಮಾಡುತ್ತಾರಾ ಎಂದು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಜೆ.ಎಸ್.ಬಸವರಾಜು ಅವರು, ಕರೊನಾ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆರೋಗ್ಯದ ವಿಚಾರದಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಯಾಗದಂತೆ ನೋಡಿ ಕೊಳ್ಳಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಡಾ.ನವ್ಯಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎನ್.ಸಿ. ಪ್ರಕಾಶ್, ಬಿಜೆಪಿ ತಾಲೂಕು ಅಧ್ಯಕ್ಷ ಪಂಚಾಕ್ಷರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ, ಮುಖಂಡರಾದ ಜಿ.ಎನ್.ಬೆಟ್ಟಸ್ವಾಮಿ, ಚಂದ್ರಶೇಖರಬಾಬು, ಎಸ್.ಡಿ.ದಿಲೀಪ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರುಷೋತ್ತಮ, ಡಿಎಚ್ಒ ನಾಗೇಂದ್ರಪ್ಪ, ತಹಸೀಲ್ದಾರ್ ಡಾ.ಪ್ರದೀಪ್ಕುಮಾರ್ ಹಿರೇಮಠ್, ಟಿಎಚ್ಒ ಡಾ.ಬಿಂದು ಮಾಧವ. ಡಿ.ವೈ.ಎಸ್.ಪಿ ಕುಮಾರಪ್ಪ, ಕಂದಾಯ ನಿರೀಕ್ಷ ಕೆ.ವಿ.ನಾರಾಯಣ್ ಮತ್ತಿತರರು ಇದ್ದರು.
ತಾಲೂಕಿನ ಎಲ್ಲ ಭಾಗದಲ್ಲಿಯೂ ಕರೊನಾ ಟಾಸ್ಕ್ಫೋರ್ಸ್ ರಚನೆ ಮಾಡಿ ಆ ಮೂಲಕ ಗ್ರಾಮೀಣ ಭಾಗದಲ್ಲಿ ಸೋಂಕನ್ನು ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ತಾಲೂಕಿನಲ್ಲಿ 4 ಕೋವಿಡ್ ಸೆಂಟರ್ಗಳು ಪ್ರಾರಂಭವಾಗಿರುವುದರಿಂದ ಬೆಡ್ ಹಾಗೂ ಚಿಕಿತ್ಸೆ ಸಮಸ್ಯೆ ಕಂಡು ಬರುತ್ತಿಲ್ಲ.
ಎಸ್.ಆರ್.ಶ್ರೀನಿವಾಸ್ ಶಾಸಕ