ಚೆನ್ನೈ: ಸನಾತನ ಧರ್ಮದ ಕುರಿತಂತೆ ನಾನು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ನಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರ ವಿರುದ್ಧ FIR ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ ಉದಯನಿಧಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಉದಯನಿಧಿ ಸ್ಟಾಲಿನ್ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸನಾತನ ಧರ್ಮದ ಕುರಿತು ಹೇಳಿಕೆಗೆ ಸಂಬಂಧಿಸಿದಂತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಾರಾಣಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
ಸನಾತನ ಧರ್ಮ ನಿರ್ಮೂಲನೆ ಮಾಡಬೇಕೆಂದು ಹೇಳಿಕೆ ಕೊಟ್ಟಿರುವ ಸಚಿವ ಉದಯನಿಧಿ ವಿರುದ್ಧ FIR ದಾಖಲಿಸಬೇಕೆಂದು ಕೋರಿ ವಕೀಲ ಜಗನ್ನಾಥ್ ಎಂಬುವವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ ತ್ರಿವೇದಿ ಅವರಿದ್ದ ದ್ವಿಸದಸ್ಯ ಪೀಠವು ಉದಯನಿಧಿ ಸ್ಟಾಲಿನ್ ಹಾಗೂ ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.
ಸನಾತನ ಧರ್ಮ ನಿರ್ಮೂಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಉದಯನಿಧಿ ಸ್ಟಾಲಿನ್ ನಡೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ವಕೀಲ ಜಗನ್ನಾಥ್ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಆಗ್ರಹಿಸಿದ್ದರು.