More

    ಕೆಪಿಎಸ್​ಸಿ ಅಧ್ಯಕ್ಷರ ನೇಮಕದಲ್ಲಿ ಪಾರದರ್ಶಕತೆ ಇರಲಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್​ಸಿ) ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

    ಕೆಪಿಎಸ್​ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ನೇಮಕಾತಿ ಪ್ರಶ್ನಿಸಿ ಶಶಿ ಪ್ರಸಾದ್ ಗಾಂಧಿ ಹಾಗೂ ಆಯೋಗದ 11 ಸದಸ್ಯರ ನೇಮಕಾತಿ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಪ್ರಕಟಿಸಿದೆ.

    ಆದೇಶದಲ್ಲೇನಿದೆ?: ಕೆಪಿಎಸ್​ಸಿ ಅಧ್ಯಕ್ಷ ಹಾಗೂ ಸದಸ್ಯರ ಹುದ್ದೆಗಳು ಉನ್ನತ ಮಟ್ಟದ ಹಾಗೂ ಅತಿಸೂಕ್ಷ್ಮ ಸಾಂವಿಧಾನಿಕ ಹುದ್ದೆಗಳಾಗಿದ್ದು, ಅವುಗಳ ನೇಮಕಾತಿ ವೇಳೆ ರಾಜ್ಯ ಸರ್ಕಾರ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವ ಮೂಲಕ ಯಾವುದೇ ಆಕ್ಷೇಪಣೆ, ಆರೋಪ ಮತ್ತು ಸ್ವೇಚ್ಛೆಯಿಂದ ಅಧಿಕಾರ ಬಳಕೆಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕು. ಲೋಕಸೇವಾ ಆಯೋಗದ ಅಧ್ಯಕ್ಷರ ನೇಮಕಾತಿಗೆ ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಪಂಜಾಬ್ ಸರ್ಕಾರ ಮತ್ತು ಸಲೀಲ್ ಸಬ್​ಲೋಕ್ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಪಾಲನೆಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ನಡೆಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.

    ಶಿಫಾರಸು ಪ್ರಚಲಿತದಲ್ಲಿರಲಿಲ್ಲ: ಕೆಪಿಎಸ್​ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿ ವೇಳೆ ಶೋಧನಾ ಸಮಿತಿ ರಚನೆ ಮಾಡಬೇಕು ಎಂದು ಕೇಂದ್ರ ಲೋಕಸೇವಾ ಆಯೋಗದ ನಿವೃತ್ತ ಅಧ್ಯಕ್ಷ ಪಿ.ಸಿ. ಹೋಟಾ ಸಮಿತಿ ಮಾಡಿದ್ದ ಶಿಫಾರಸನ್ನು ಕೈ ಬಿಡಲು ರಾಜ್ಯ ಸಚಿವ ಸಂಪುಟ 2013ರ ಆ. 23ರಂದು ನಿರ್ಣಯ ಕೈಗೊಂಡಿದೆ. ಅಂದರೆ, 2021ರಲ್ಲಿ ಶಿವಶಂಕರ ಎಸ್.ಸಾಹುಕಾರ್ ಅವರನ್ನು ಸದಸ್ಯರಾಗಿ ನಂತರ ಅವರನ್ನೇ ಅಧ್ಯಕ್ಷರಾಗಿ ಹಾಗೂ ಡಾ.ಚಂದ್ರಕಾಂತ್ ಡಿ.ಶಿವಕೇರಿ ಸೇರಿ 11 ಮಂದಿ ಸದಸ್ಯರನ್ನು ನೇಮಿಸಿದ ಸಂದರ್ಭದಲ್ಲಿ ಹೋಟಾ ಸಮಿತಿಯ ಶಿಫಾರಸು ಪ್ರಚಲಿತದಲ್ಲಿರಲಿಲ್ಲ. ಹೀಗಿರುವಾಗ, ಅರ್ಜಿದಾರರ ವಾದದಂತೆ ಹೋಟಾ ಸಮಿತಿಯ ಶಿಫಾರಸನ್ನು ಸರ್ಕಾರ ಪಾಲನೆ ಮಾಡಿಲ್ಲ ಎನ್ನಲಾಗದು. ಈ ಹಿನ್ನೆಲೆಯಲ್ಲಿ ಕೆಪಿಎಸ್​ಸಿ ಅಧ್ಯಕ್ಷರ ಹಾಗೂ ಸದಸ್ಯರ ನೇಮಕಕ್ಕೆ ಹೋಟಾ ಸಮಿತಿಯ ಮಾರ್ಗಸೂಚಿ ಪಾಲಿಸಬೇಕು ಮತ್ತು ನಿರ್ದಿಷ್ಟ ನಿಯಮ ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಅರ್ಜಿದಾರರ ಮನವಿ ಪರಿಗಣಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಪಿಐಎಲ್ ಇತ್ಯರ್ಥಪಡಿಸಿದೆ.

    ಅರ್ಜಿದಾರರ ಮನವಿ: ಕೆಪಿಎಸ್​ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ನಿರ್ದಿಷ್ಟ ನಿಯಮಗಳನ್ನು ರೂಪಿಸಬೇಕು. ನಿಯಮ ರೂಪಿಸುವವರೆಗೆ ಹೋಟಾ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಮಾಗಸೂರ್ಚಿಗಳನ್ನು ಪಾಲಿಸಬೇಕು ಎಂದು 2016ರಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು. ಆದರೆ, ಹೋಟಾ ಸಮಿತಿ ಮಾರ್ಗಸೂಚಿಯಂತೆ ಶೋಧನಾ ಸಮಿತಿ ರಚಿಸದೆ ಹಾಗೂ ಯಾವುದೇ ನಿಯಮ ರೂಪಿಸದೆ ರಾಜ್ಯ ಸರ್ಕಾರ ಕೆಪಿಎಸ್​ಎಸಿಗೆ ಸದಸ್ಯರನ್ನು ನೇಮಿಸಿದೆ. ಆದ್ದರಿಂದ, ಕೆಪಿಎಸ್​ಸಿ ಸದಸ್ಯರ ನೇಮಕಾತಿ ರದ್ದುಪಡಿಸಿ, ಹೋಟಾ ಸಮಿತಿ ಅನುಸಾರ ಹೊಸದಾಗಿ ಸದಸ್ಯರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ನರಸಿಂಹ ಮೂರ್ತಿ ಪರ ವಕೀಲರು ಕೋರಿದ್ದರು. ಕೆಪಿಎಸ್​ಸಿ ಅಧ್ಯಕ್ಷ ಶಿವಶಂಕರ್ ಎಸ್.ಸಾಹುಕಾರ್ ಅವರು ಹಿಂದೆ ಸದಸ್ಯರಾಗಿದ್ದರು. ಅವರನ್ನೇ 2021ರಲ್ಲಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಆದರೆ, ನೇಮಕಾತಿಯ ವೇಳೆ ಹೈಕೋರ್ಟ್ ಆದೇಶದಂತೆ ಯಾವುದೇ ನಿರ್ದಿಷ್ಟ ನಿಯಮ ಅಥವಾ ಹೋಟಾ ಸಮಿತಿಯ ಮಾರ್ಗಸೂಚಿ ಪಾಲಿಸಿಲ್ಲ. ಆದ್ದರಿಂದ, ಅವರ ನೇಮಕಾತಿ ರದ್ದುಪಡಿಸಬೇಕು ಎಂದು ಮತ್ತೊಬ್ಬ ಅರ್ಜಿದಾರ ಶಶಿ ಪ್ರಸಾದ್ ಗಾಂಧಿ ಪರ ವಕೀಲರು ಮನವಿ ಮಾಡಿದ್ದರು.

    ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

    ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts