ನಂಜನಗೂಡು: ನಿಮ್ಮ ಉತ್ಸಾಹ ನೋಡಿದರೆ ಏನು ಮಾತನಾಡಬೇಕೆಂದು ಗೊತ್ತಾಗುತ್ತಿಲ್ಲ. ಇದೇ ನನ್ನ ಕೊನೆಯ ಚುನಾವಣೆ. ಮುಂದೆ ಮಗ ಯತೀಂದ್ರ ಮತ್ತು ಮೊಮ್ಮಗ ಧವನ್ ಇದ್ದಾನೆ. ನಿಮ್ಮೆಲ್ಲರ ಆಶೀರ್ವಾದ ಬಯಸಿ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೊಡ್ಡ ಅಂತರದಿಂದ ಗೆಲ್ಲಿಸುತ್ತೀರಿ!
ವರುಣ ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾ, ಬಿಜೆಪಿಯವರು ವರುಣ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವರಿಗೆ ಚುನಾವಣೆಗೆ ಸ್ಪರ್ಧಿಸುವ ಅವಕಾಶ ನೀಡಿಲ್ಲ. ಬೆಂಗಳೂರಿನಿಂದ ವಿ.ಸೋಮಣ್ಣ ಅವರನ್ನು ಕರೆತಂದು ನಿಲ್ಲಿಸಿದ್ದಾರೆ. ಬಿಜೆಪಿ-ಜೆಡಿಎಸ್ನವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಾಗಿ ಜೆಡಿಎಸ್ನವರು ಡಾ.ಭಾರತಿ ಶಂಕರ್ ಅವರನ್ನು ಕರೆತಂದು ನಿಲ್ಲಿಸಿದ್ದಾರೆ. ಬಿಜೆಪಿ, ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಿ ದೊಡ್ಡ ಅಂತರದಲ್ಲಿ ನೀವು ಗೆಲ್ಲಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದರು.
ಇದನ್ನೂ ಓದಿ: ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಬೇಕೆಂದು ಟವರ್ ಏರಿದ ಕಾರ್ಯಕರ್ತ!
ಬಿಜೆಪಿಯವರು ಕುತಂತ್ರ ಮಾಡುವುದರಲ್ಲಿ ನಿಸ್ಸೀಮರು!
ಬಿಜೆಪಿಯವರು ಕುತಂತ್ರ ಮಾಡುವುದರಲ್ಲಿ ನಿಸ್ಸೀಮರು. ಬಿಜೆಪಿ, ಜೆಡಿಎಸ್ನವರು ನನ್ನನ್ನು ಸೋಲಿಸಲೇಬೇಕೆಂದು ಹಣ ಹೊಳೆ ಹರಿಸಬಹುದು. ಎಷ್ಟೇ ಕೋಟಿ ರೂಪಾಯಿ ಖರ್ಚು ಮಾಡಲಿ, ಎಷ್ಟೇ ಕುತಂತ್ರ, ಹುನ್ನಾರ ಮಾಡಲಿ, ವರುಣ ಕ್ಷೇತ್ರದ ಜನ ಇದ್ಯಾವುದಕ್ಕೂ ಸೊಪ್ಪು ಹಾಕುವುದಿಲ್ಲ. ನನಗೆ ಆಶೀರ್ವಾದ ಮಾಡೇ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯವರಿಗೆ ಭಯ!
ಇಡೀ ರಾಜ್ಯದ ಜನ ಸಿದ್ದರಾಮಯ್ಯ ಅವರಿಗೆ ಪ್ರೀತಿ ತೋರಿಸುತ್ತಿದ್ದಾರೆ. ಇದು ಬಿಜೆಪಿಯವರಿಗೆ ಭಯ ಉಂಟು ಮಾಡಿದ್ದು, ಚುನಾವಣೆಯಲ್ಲಿ ನನ್ನನ್ನು ಸೋಲಿಸಬೇಕೆಂದು ತೀರ್ಮಾನಿಸಿದ್ದಾರೆ. ವರುಣ ನಾನು ಹುಟ್ಟಿದ ಹೋಬಳಿ. ನಮ್ಮೂರು ಸಿದ್ದರಾಮನಹುಂಡಿ ಇಲ್ಲೇ ಇದೆ. ಇದು ನನ್ನ ಕೊನೆಯ ಚುನಾವಣೆ. ರಾಜ್ಯದಲ್ಲಿ ಶೇ.40-50ರಷ್ಟು ಭ್ರಷ್ಟಾಚಾರ ನಡೆದಿದ್ದು, ಬಿಜೆಪಿಯನ್ನು ಸೋಲಿಸಲೇಬೇಕು. ಜೆಡಿಎಸ್ನವರಿಗೆ ಅತಂತ್ರ ಸರ್ಕಾರ ಬರಬೇಕು. ನನಗೆ ಸ್ಪಷ್ಟ ಮಾಹಿತಿ ಇದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸೂರ್ಯೋದಯದಷ್ಟೇ ಸತ್ಯ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ಚುನಾವಣಾ ಕಣದಲ್ಲಿ ಕೋಟ್ಯಧೀಶರ ಅದೃಷ್ಟ ಪರೀಕ್ಷೆ; ಸಾಲ ಇಲ್ಲದ ಕಾಗೇರಿ | ಶತಕೋಟಿ ಒಡೆಯ ಭೈರತಿ ಬಸವರಾಜು