ಲಖನೌ: ಉತ್ತರಪ್ರದೇಶ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಗೋಸಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಿಜೆಪಿ ಹಾಗೂ ಸಮಾಜವಾದಿ ಪಕ್ಷದ ನಾಯಕರ ನಿದ್ದೆಗೆಡಿಸಿದೆ. ಹೇಗಾದರೂ ಮಾಡಿ ಈ ಉಪಚುನಾವಣೆಯಲ್ಲಿ ಗೆದ್ದು, ರಾಷ್ಟ್ರ ರಾಜಕಾರಣಕ್ಕೆ ಹೊಸ ಸಂದೇಶ ರವಾನೆ ಮಾಡಬೇಕೆಂಬ ನಿಟ್ಟಿನಲ್ಲಿ ಉಭಯ ಪಕ್ಷದ ನಾಯಕರು ಕೆಲಸ ಮಾಡುತ್ತಿದ್ದಾರೆ.
ಇತ್ತ ಬಿಜೆಪಿ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಉತ್ತರಪ್ರದೇಶ ವಿಪಕ್ಷ ನಾಯಕ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ 2014ರಲ್ಲಿ ಅಧಿಕಾರಕ್ಕೆ ಬಂದವರು 2024ರಲ್ಲಿ ಕೆಳಗಿಳಿಯುತ್ತಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ದ: ಕೇಂದ್ರ ಸರ್ಕಾರ
ಉತ್ತರಪ್ರದೇಶದ ಸಫೈನಲ್ಲಿ ಈ ಕುರಿತು ಮಾತನಾಡಿದ ಅಖಿಲೇಶ್ ಯಾದವ್ I.N.D.I.A ಒಕ್ಕೂಟದ ಸಭೆಯಲ್ಲಿ ಭಾಗಿಯಾಗಲು ತುಂಬಾ ಸಂತಸವಾಗುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆದ್ದು, ವಿಪಕ್ಷಗಳ ಒಕ್ಕೂಟ ಸರ್ಕಾರವನ್ನು ರಚಿಸಲಿದೆ. ಜನರಿಗೆ ನಿರಂತರವಾಗಿ ಮೋಸ ಮಾಡುತ್ತಿರುವ ಬಿಜೆಪಿ ಅಧಿಕಾರದಿಂದ ಕೆಳಗಿಳಿಯಲಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಿಂದ 80 ಸಂಸದರು ಆಯ್ಕೆಯಾಗಲಿದ್ದಾರೆ. ಹೀಗಾಗಿ ರಾಷ್ಟ್ರ ರಾಜಕಾರಣದಲ್ಲಿ ಉತ್ತರಪ್ರದೇಶ ಬಹುಮುಖ್ಯ ಪಾತ್ರ ವಹಿಸುತ್ತದೆ. ಜನರು ಬಿಜೆಪಿ ಸರ್ಕಾರವನ್ನು ಕೆಳಗಿಳಿಸಲು ನಿರ್ಧರಿಸಿದ್ದು, 2014ರಲ್ಲಿ ಅಧಿಕಾರಕ್ಕೇರಿದವರು 2024ರಲ್ಲಿ ಸೋಲುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.