ರಾಣೆಬೆನ್ನೂರ: ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ 10 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತವಾಗಿ ಬೈಕ್ ನೀಡಲು ಚಿಂತನೆ ನಡೆಸಿದ್ದು, ಈ ಕುರಿತು ಮುಖ್ಯಮಂತ್ರಿಯೊಂದಿಗೆ ರ್ಚಚಿಸಿ ಅನುದಾನ ಕೇಳಲಾಗುವುದು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ತಾಲೂಕಿನ ಮುಷ್ಟೂರು, ಹಿರೇಬಿದರಿ, ಹಾರೋಗೋಪ್ಪ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ವಿುಸಿದ ಶಾಲಾ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಸಮಯಕ್ಕೆ ಸರಿಯಾಗಿ ಶಾಲೆಗಳಿಗೆ ತಲುಪಬೇಕು. ಆದರೆ, ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರದ ಕೊರತೆಯಿಂದ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ಬೈಕ್ ಕೊಡಿಸಲು ಚಿಂತನೆ ಮಾಡಿದ್ದೇನೆ. ಅದಕ್ಕೆ ಕನಿಷ್ಠ 10 ಕೋಟಿ ರೂಪಾಯಿ ಅನುದಾನ ಬೇಕಾಗುತ್ತದೆ. 1 ಕೋಟಿ ರೂ.ವರೆಗೂ ಆಗಿದ್ದರೆ ನನ್ನದೇ ಅನುದಾನದಲ್ಲಿ ನೀಡುತ್ತಿದ್ದೆ ಎಂದರು.
ಸರ್ಕಾರಿ ಶಾಲೆಯ ಮಕ್ಕಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಇಂದಿನ ದಿನದಲ್ಲಿ ಖಾಸಗಿ ಶಾಲೆಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಹಾಗೂ ಶಿಕ್ಷಣ ದೊರೆಯುತ್ತಿದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದರು.
ಮುಷ್ಟೂರು ಸರ್ಕಾರಿ ಶಾಲೆ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜಕುಮಾರ ಓಲೇಕಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಗ್ರಾಪಂ ಅಧ್ಯಕ್ಷೆ ಚಂದ್ರವ್ವ ಹಿರೇಮರದ, ಉಪಾಧ್ಯಕ್ಷೆ ಮಂಜುಳಾ ಪಾಟೀಲ, ಬಿಇಒ ಗುರುಪ್ರಸಾದ, ಲೋಕೋಪಯೋಗಿ ಇಲಾಖೆ ಎಇಇ ಆರ್. ಮಂಜುನಾಥ, ಪ್ರಮುಖರಾದ ಹರಿಹರಗೌಡ ಪಾಟೀಲ, ಪ್ರಭು ತಳವಾರ, ಸಿ.ಸಿ. ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.