ಲಖನೌ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ನ ಲೋನಿ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಘಾಜಿಯಾಬಾದ್ ಗ್ರಾಮೀಣ ಡಿಸಿಪಿ ವಿವೇಕ್ಚಂದ್ ಯಾದವ್ ಘಟನೆ ಶನಿವಾರ ರಾತ್ರಿ 11:30ರ ಸುಮಾರಿಗೆ ನಡೆದಿದೆ. ಬಿಲ್ಡಿಂಗ್ನ ಮಾಲೀಕ ಶಕೀಲ್ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ಶಾರಿಖ್ ಎಂಬಾತನಿಗೆ ಮನೆಯನ್ನು ಬಾಡಿಗೆ ನೀಡಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಸೊಮಾಲಿಯಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 13 ಮಂದಿ ಮೃತ್ಯು
ಘಟನೆಯಲ್ಲಿ ಇಮ್ರಾನ್ (16), ಫರ್ದೀನ್ (18), ಆಲೀನಾ (12) ಮೃತಪಟ್ಟಿದ್ದಾರೆ. ಮೆವಿಸ್ (45), ಶೈಸ್ತಾ (40), ಆಲಿಶಾ (10), ನಾರ್ರಿ (18) ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ದುರಂತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಮನೆಯಲ್ಲಿ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಈ ಸಂಬಂಧ ಪರಿಶೀಲನೆಗೆಂದು ಫೋರೆನ್ಸಿಕ್ ಹಾಗೂ ಶ್ವಾನದಳವನ್ನು ಸ್ಥಳಕ್ಕೆ ಕರೆಸಲಾಗಿದ್ದು, ಅವರು ನೀಡುವ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಘಾಜಿಯಾಬಾದ್ ಗ್ರಾಮೀಣ ಡಿಸಿಪಿ ವಿವೇಕ್ಚಂದ್ ಯಾದವ್ ತಿಳಿಸಿದ್ದಾರೆ.