More

    ಕ್ಷಯ ನಿರ್ಮೂಲನೆಗೆ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

    ಮಂಡ್ಯ: ಕ್ಷಯರೋಗ ನಿರ್ಮೂಲನೆಗೆ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಸಮನ್ವಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷಯ ರೋಗವನ್ನು ಪತ್ತೆ ಹಚ್ಚುವ ಕೆಲಸ ಹೆಚ್ಚಾಗಬೇಕು. ನಂತರ ಅವರಿಗೆ ನಿಗದಿಪಡಿಸಿದ ಅವಧಿಯಲ್ಲಿ ತಪ್ಪದೇ ಔಷಧ ಪಡೆಯುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ ಎಂದರು.
    ಕ್ಷಯರೋಗದ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿ ಅರಿವು ಕಡಿಮೆ. ಅವರಲ್ಲಿ ಕ್ಷಯರೋಗ ನಿರ್ಮೂಲನೆಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಸರ್ಕಾರದಿಂದ ಕ್ಷಯರೋಗದ ಚಿಕಿತ್ಸೆಗೆ ಲಭ್ಯವಿರುವ ಸೌಲಭ್ಯದ ಬಗ್ಗೆ ತಿಳಿಸುವ ಕೆಲಸವಾಗಬೇಕು. ಕ್ಷಯರೋಗಿಗಳ ಪೈಕಿ ಸಾಕಷ್ಟು ಜನರು ಚಿಕಿತ್ಸೆ ಪಡೆಯುವುದನ್ನು ಅರ್ಧಕ್ಕೆ ನಿಲ್ಲಿಸುತ್ತಾರೆ. ಇಂತಹವರನ್ನು ಗುರುತಿಸುವ ಕೆಲಸವಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸಂಪೂರ್ಣ ಗುಣಮುಖರಾಗುವವರೆಗೂ ಚಿಕಿತ್ಸೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಮಂಡ್ಯ ಹಾಗೂ ಮದ್ದೂರು ತಾಲೂಕಿನಲ್ಲಿ ಕ್ಷಯರೋಗಿಗಳ ಸಂಖ್ಯೆ ಹೆಚ್ಚಿದೆ. ಯಾವ ಕಾರಣಕ್ಕಾಗಿ ಈ ಭಾಗದಲ್ಲಿ ಕ್ಷಯ ರೋಗಿಗಳ ಸಂಖ್ಯೆ ಅಧಿಕವಾಗುತ್ತಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಅದರ ನಿವಾರಣೆಗೆ ಮುಂದಾಗಬೇಕು. ಕ್ಷಯರೋಗಿಗಳು ಹಾಗೂ ಕುಟುಂಬದವರಿಗೆ ಕೌನ್ಸಲಿಂಗ್ ಮಾಡಬೇಕು. ಕ್ಷಯರೋಗಿಗಳು ಕುಟುಂಬದವರೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಸಲಹೆ ಸೂಚನೆ ನೀಡಬೇಕು. ಆಗ ಮಾತ್ರ ಕ್ಷಯರೋಗ ನಿವಾರಣೆ ಸಾಧ್ಯ. ಕ್ಷಯರೋಗ ನಿವಾರಣೆ ಸಂಬಂಧ ಇಲಾಖಾವಾರು ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಪಟ್ಟಿ ಮಾಡಿ ಕೊಡಿ ಎಂದು ಸೂಚಿಸಿದರು.
    ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎನ್.ಆಶಾಲತಾ ಮಾತನಾಡಿ, ಜಿಲ್ಲೆಯಲ್ಲಿ ಸಕ್ರಿಯ ಕ್ಷಯಯರೋಗ ಪತ್ತೆ ಆಂದೋಲನವೂ 2023 ಜು.17ರಿಂದ ಆ.2ರವರೆಗೆ ಸಮೀಕ್ಷಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಕೊಳಚೆ, ಗುಡ್ಡಗಾಡು ಪ್ರದೇಶಗಳಾದ ಕಲ್ಲುಕ್ವಾರೆ ಹಾಗೂ ಕೈಗಾರಿಕಾ ಪ್ರದೇಶ, ಧೂಮಪಾನ ಹಾಗೂ ಮದ್ಯಪಾನ ಮಧುಮೇಹಿ ಜನರನ್ನು ಗುರಿಯಾಗಿಸಿಕೊಂಡು ಈ ಸಮೀಕ್ಷಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕ್ಷಯರೋಗ ಲಕ್ಷಣಗಳಾದ ಕೆಮ್ಮು, ಕಫದಲ್ಲಿ ರಕ್ತ ಬೀಳುವುದು, ಸಂಜೆ ವೇಳೆ ಜ್ವರ, ತೂಕ ಕಡಿಮೆಯಾಗಿರುವುದು, ಹಸಿವಾಗದಿರುವುದು ಇಂತಹ ಲಕ್ಷಣಗಳಿದ್ದರೆ ಆರೋಗ್ಯ ಕಾರ್ಯಕರ್ತರು ಮನೆ ಭೇಟಿ ಸಂದರ್ಭದಲ್ಲಿ ಮಾಹಿತಿ ನೀಡಿ ಕಫ ಪರೀಕ್ಷೆಗೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.
    ಜಿಲ್ಲೆಯಲ್ಲಿ ಮಂಡ್ಯ, ಪಾಂಡವಪುರ, ನಾಗಮಂಗಲ ತಾಲೂಕಿನಲ್ಲಿ ಕ್ಷಯರೋಗ ಪತ್ತೆ ಹಚ್ಚುವ(ಸಿಬಿನೆಟ್) ಯಂತ್ರೋಪಕರಣಗಳಿವೆ. ಕೆ.ಆರ್.ಪೇಟೆ ಮತ್ತು ಮಳವಳ್ಳಿಯಲ್ಲಿ ನ್ಯಾಟ್ ಯಂತ್ರಗಳಿದ್ದು, ಶ್ರೀರಂಗಪಟ್ಟಣ ಹಾಗೂ ಮದ್ದೂರು ತಾಲೂಕಿಗೆ ಡಿಎಂಎಫ್ ಅನುದಾನದಿಂದ ನ್ಯಾಟ್ ಯಂತ್ರೋಪಕರಣ ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಗೆ ವಿವರಿಸಿದರು.
    ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಷಯರೋಗ ನಿಯಂತ್ರಣ ಸಂಬಂಧ ಕರಪತ್ರ ಮುದ್ರಿಸಿ ಹಂಚಿಕೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.
    ವಿಶ್ವ ಆರೋಗ್ಯ ಸಂಸ್ಥೆ ಸಲಹೆಗಾರ್ತಿ ಡಾ.ಶಾಜೀಯ ಅಂಜುಂ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ಪಿ.ಅಶ್ವಥ್, ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ಸಿದ್ದಲಿಂಗಪ್ಪ ಹೂಗಾರ್, ಶ್ವಾಸಕೋಶ ತಜ್ಞ ಡಾ.ಮೋಹನ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿಗಳಾದ ಜವರೇಗೌಡ, ಮಧುಸೂದನ್, ಪ್ರಸನ್ನ, ಅರವಿಂದ್, ರವೀಂದ್ರ ಬಿ.ಗೌಡ, ವೀರಭದ್ರಪ್ಪ, ಸಹಾಯಕ ಔಷಧ ನಿಯಂತ್ರಕ ಮಹಮದ್ ಜಾವೀದ್ ಕಲೀಲ್, ಡಿಡಿಪಿಐ ಎಸ್.ಟಿ.ಜವರೇಗೌಡ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ವಕೀಲ ಗುರುಪ್ರಸಾದ್ ಇತರರಿದ್ದರು.
    ವೈದ್ಯರ ದಿನದ ಅಂಗವಾಗಿ ರಾಜ್ಯಸರ್ಕಾರದಿಂದ ಅತ್ಯುತ್ತಮ ವೈದ್ಯ ಪ್ರಶಸ್ತಿ ಪಡೆದ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎನ್.ಆಶಾಲತಾ ಅವರನ್ನು ಜಿಲ್ಲಾಡಳಿತದಿಂದ ಅಭಿನಂದಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದ ಫೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts