ತುಮಕೂರು: ತಾಲೂಕಿನ ಗೂಳೂರು ಐತಿಹಾಸಿಕ ಪ್ರಸಿದ್ಧ ಶ್ರೀಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ಭಾನುವಾರ ನಡೆಯಿತು.
ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಾವಿರಾರು ಭಕ್ತರು ಸ್ವಾಮಿಯ ದರ್ಶನ ಪಡೆದರು. ಶನಿವಾರ ರಾತ್ರಿ ಊರಿನ ಯಜಮಾನರ ಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.
ನಂತರ ಗ್ರಾಮದ 18 ಕೋಮಿನ ಜನರು ಒಗ್ಗೂಡಿ ಮಹಾಗಣಪತಿಯನ್ನು ದೇವಾಲಯದಿಂದ ಹೊರತಂದು ಸರ್ವಾಲಂಕೃತ ವಾಹನದಲ್ಲಿ ಕೂರಿಸಿ ಮಧ್ಯರಾತ್ರಿವರೆಗೂ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಭಾನುವಾರ ಜರುಗಿನ ಮಹಾಗಣಪತಿ ಉತ್ಸವದಲ್ಲಿ ವಿವಿಧ ಜನಪದ ಕಲಾತಂಡಗಳಾದ ನಾದಸ್ವರ, ಕರಡಿ ಮಜಲು, ನಾಸಿಕ್ ಡೋಲ್, ಕೇರಳದ ಜಾನಪದ ನೃತ್ಯ, ಮಂಡದ ಕಲಾ ತಂಡದಿಂದ ಕರಡಿ ವಾದ್ಯ, ಮಹಿಳಾ, ಪುರುಷ ವೀರಗಾಸೆ ತಂಡಗಳು, ಕೀಲು ಕುದುರೆ, ನಂದಿಕೋಲು, ನವಿಲು, ಜಿರಾಫೆ, ಕವಾಡ ನೃತ್ಯ, ಹಾಸ್ಯದ ಚಾರ್ಲಿ ನೃತ್ಯ, ವೀರಭದ್ರ ದೇವರ ಕುಣಿತ, ವೀರಗಸೆ, ಡೊಳ್ಳು, ಪೂಜಾ ಕುಣಿತ ಮೆರುಗು ಹೆಚ್ಚಿಸಿದ್ದವು.
ಬೆಳಗಿನ ಜಾವ 500 ಅಡಿ ಉದ್ದದ ಜೋಗ್ಪಾಲ್ಸ್, ನೂರು ಬಾರಿ ಒಡೆಯುವ ಔಟ್ಸ್ ಹಾಗೂ ಪ್ಯಾರಚೂಟ್ಗಳ ಪ್ರದರ್ಶನ ಹಾಗೂ ನಸುಕಿನಲ್ಲಿ ನಡೆದ ಆಕರ್ಷಕ ವರ್ಣರಂಜಿತ ಸಿಡಿಮದ್ದಿನ ಪ್ರದರ್ಶನ ನೆರೆದಿದ್ದ ಭಕ್ತಾದಿಗಳಲ್ಲಿ ರೋಮಾಂಚನ ಉಂಟು ಮಾಡಿತು.
ಗಣೇಶಮೂರ್ತಿಯ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಗ್ರಾಮದ ಜನತೆ ಮತ್ತು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ರಸ್ತೆಯ ಇಕ್ಕೆಲಗಳಲ್ಲಿ ಜಮಾಯಿಸಿ ವಿಘ್ನೇಶ್ವರಿಗೆ ಪೂಜೆ ಸಲ್ಲಿಸಿದರು. ಗೂಳೂರು ಕೆರೆ ಬಳಿ ಸಾಗಿದ ಗಣೇಶಮೂರ್ತಿಯನ್ನು ಆಕರ್ಷಕ ವರ್ಣರಂಜಿತ ಸಿಡ್ಡಿಮದ್ದು ಸಿಡಿಸಿ ಸಂಭ್ರಮಿಸಿದ ನಂತರ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಮಹಾಗಣಪತಿ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜಿಸಲಾಯಿತು.