ಲಖನೌ: ನಾವು ಪ್ರತಿನಿತ್ಯ ಒಂದಲ್ಲ ಒಂದು ವಿಚಾರಕ್ಕೆ ಜನ ಕಿತ್ತಾಡಿಕೊಳ್ಳುವುದನ್ನು ನೋಡಿದ್ದೇವೆ ಹಾಗೂ ಕೇಳಿದ್ದೇವೆ. ಕೆಲವೊಮ್ಮ ಈ ಕಾರಣಗಳನ್ನು ಕೇಳಿ ನಾವು ಕ್ಷುಲಕ ಎಂದು ಅಲ್ಲಗಳೆಯುತ್ತೇವೆ. ಆದರೆ, ಪಾನಿಪುರಿ ತಿನ್ನುವ ವಿಚಾರಕ್ಕೆ ಶುರುವಾದ ಗಲಾಟೆ ಎರಡು ಗುಂಪುಗಳ ನಡುವಿನ ದೊಡ್ಡ ಹೊಡೆದಾಟಕ್ಕೆ ಕಾರಣವಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಘರ್ಷಣೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಗುಂಪನ್ನು ಚದುರಿಸಲು ಅಂಗಡಿ ಮಾಲೀಕ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತ ಪ್ರಶ್ನೆಗಳು ಉದ್ಭವಿಸಿವೆ.
ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಕೊಟ್ಟ ವಿದೇಶಾಂಗ ಇಲಾಖೆ
ಈ ಕುರಿತು ಪ್ರತಿಕ್ರಿಯಿಸಿರುವ ಕಾನ್ಪುರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪಾನಿಪುರಿ ತಿನ್ನುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ಶುರುವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳ ಸದಸ್ಯರು ಕಲ್ಲುತೂರಾಟ ನಡೆಸಿದ್ದಾರೆ. ಗುಂಪನ್ನು ಚದುರಿಸಲು ಅಂಗಡಿಯ ಮಾಲೀಕ ತನ್ನ ಬಳಿ ಇದ್ದ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.
ಆತನ ಬಳಿ ಇರುವ ಗನ್ಗೆ ಲೈಸೆನ್ಸ್ ಹೊಂದಿದ್ದು, ರಕ್ಷಣೆಗಾಗಿ ಈ ರೀತಿ ಮಾಡಿದ್ದಾಗಿ ಪೊಲೀಸರ ಬಳಿ ಹೇಳಿದ್ದಾನೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, 19 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಕಾನ್ಪುರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.