ಬಳ್ಳಾರಿ: ನಗರದ ಮರಿ ಸ್ವಾಮಿ ಮಠದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಆರಂಭವಾದ ಗಲಾಟೆಯಿಂದ ಇಡೀ ಏರಿಯಾದಲ್ಲಿ ಗುಂಪು ಘರ್ಷಣೆಯಾಗಿ ಮಾರಕಾಸ್ತ್ರಗಳು ಝಳಪಿಸಿವೆ. ಮಚ್ಚು ದೊಣ್ಣೆಯಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಲಾಗಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ವಾಹನಗಳು ಜಖಂಗೊಂಡಿವೆ. ಮಕ್ಕಳು, ಮಹಿಳೆಯರು ಎನ್ನದೇ ದುಷ್ಕಮಿಗಳು ಹಲ್ಲೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದರು. ಊಟ ಮಾಡುವಾಗ ಇಬ್ಬರ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದೇ ಇದಕ್ಕೆಲ್ಲ ಕಾರಣ. ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.