ಚೆನ್ನೈ: ಸನಾತನ ಧರ್ಮ ನಿರ್ಮೂಲನೆ ಕುರಿತು ಹೇಳಿಕೆ ತೀವ್ರ ವಿವಾದಕ್ಕೀಡಾಗಿದ್ದ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ನಾನು ನನ್ನ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ಧೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸನಾತನ ಧರ್ಮ ನಿರ್ಮೂಲನೆ ಕುರಿತು ಹೇಳಿಕೆ ನೀಡಿದ ಆರೋಪದ ಮೇಲೆ ಮದ್ರಾಸ್ ಹೈಕೋರ್ಟ್ನಲ್ಲಿ ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅನಿತಾ ಸುಮಂತ್ ನಡೆಸಿದ್ದಾರೆ.
ಸಚಿವ ಉದಯನಿಧಿ ವಾದ ಮಂಡಿಸಿದ ಹಿರಿಯ ವಕೀಲ ವಿಲ್ಸನ್, ತಮ್ಮ ಕಕ್ಷಿದಾರರು ಸಮಾಜದಲ್ಲಿರುವ ಜಾತಿ ಪದ್ಧತಿ, ಅಸಮಾನತೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಈ ರೀತಿಯ ಪದ್ಧತಿಗಳನ್ನು ನಿರ್ಮೂಲನೆ ಮಾಡಬೇಕೆಂದು ಹೇಳಿದ್ದಾರೆ. ಆದರೆ, ಅವರ ಹೇಳಿಕೆಯನ್ನು ರಾಜಕೀಯಗೊಳಿಸಲಾಗಿದ್ದು, ದ್ವತೀಯ ದರ್ಜೆ ನಾಗರೀಕರಂತೆ ಪರಿಗಣಿಸಲಾಗುತ್ತಿದೆ.
ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ: ಮಲ್ಲಿಕಾರ್ಜುನ ಖರ್ಗೆ
ನಮ್ಮ ಕಕ್ಷಿದಾರರಾದ ಉದಯನಿಧಿ ವಿರುದ್ಧ ಸಲ್ಲಿಕೆಯಾಗಿರುವ ರಿಟ್ ಅರ್ಜಿಯು ರಾಜಕೀಯ ಪ್ರೇರಿತವಾಗಿದ್ದು, ಕಾನೂನು ದುರುಪಯೋಗದ ಒಂದು ಶ್ರೇಷ್ಠ ಉದಾಹರಣೆಯಾಗಿದೆ. 100 ವರ್ಷಗಳಷ್ಟು ಹಳೆಯದಾದ ದ್ರಾವಿಡ ಸಿದ್ಧಾಂತಕ್ಕೆ ವಿರುದ್ಧವಾಗಿರುವ ಒಂದು ನಿರ್ದಿಷ್ಟ ಸಿದ್ಧಾಂತವು ರಾಜಕೀಯ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಇತ್ಯರ್ಥಗೊಳಿಸಲು ನ್ಯಾಯಾಲಯದ ಪ್ರಕ್ರಿಯೆಯನ್ನು ಬಳಸಲು ಪ್ರಯತ್ನಿಸುತ್ತಿದೆ. ದ್ರಾವಿಡ ಸಿದ್ಧಾಂತವು ಸ್ವಾಭಿಮಾನ, ಸಮಾನತೆ, ತರ್ಕಬದ್ಧ ಚಿಂತನೆ ಮತ್ತು ಭ್ರಾತೃತ್ವದ ಬಗ್ಗೆ ಮಾತನಾಡುತ್ತಿದ್ದರೆ, ಎದುರಾಳಿ ಪಂಗಡವು ಜಾತಿಯ ಆಧಾರದ ಮೇಲೆ ವಿಭಜನೆಯ ಬಗ್ಗೆ ಮಾತನಾಡುತ್ತದೆ.
ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ತಮ್ಮ ಕಕ್ಷಿದಾರರು ಕೂಡಲೇ ಸ್ಪಷ್ಟನೆಯನ್ನು ನೀಡಿದ್ದು, ತಾವು ಎಲ್ಲಾ ಜಾತಿ, ಧರ್ಮಗಳ ಅಪಾರ ಗೌರವವನ್ನು ಹೊಂದಿದ್ದು, ಯಾರ ನಂಬಿಕೆಗೂ ಧಕ್ಕೆ ಉಂಟು ಮಾಡುವ ಉದ್ದೇಶವನ್ನು ಹೊಂದಿಲ್ಲ. ಅದಲ್ಲದೆ ಸಮಾಜವನ್ನು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ವಭಜಿಸಲು ಹೊರಟಿದವರ ಬಗ್ಗೆ ಮಾತನಾಡಲು ಅವರು ಬದ್ಧರಾಗಿದ್ದರು ಎಂದು ಹಿರಿಯ ವಕೀಲ ವಿಲ್ಸನ್ ಸಚಿವ ಉದಯನಿಧಿ ಸ್ಟಾಲಿನ ಪರ ವಾದ ಮಂಡಿಸಿದ್ದಾರೆ.
ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮದ ಆಹ್ವಾನ ಪ್ರತಿ ಮತ್ತು ಇಡೀ ವಿಡಿಯೋ ತುಣುಕನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 31ಕ್ಕೆ ನಡೆಸುವುದಾಗಿ ಅರ್ಜಿಯನ್ನು ನ್ಯಾಯಮೂರ್ತಿಗಳು ಮುಂದೂಡಿದ್ದಾರೆ.