ಉಡುಪಿ: ಮಣಿಪಾಲ ಭಾಗದಲ್ಲಿ ಒಳಚರಂಡಿಗೆ ಕೊಳಚೆ ನೀರು ಬಿಡುವ ಹೋಟೆಲ್, ಅಪಾರ್ಟ್ಮೆಂಟ್ ವಿರುದ್ಧ ಬಿಗಿಕ್ರಮ ಕೈಗೊಳ್ಳುವಂತೆ ಸದಸ್ಯರು ಆಗ್ರಹಿಸಿದರು.
ನಗರಸಭೆ ಸಭಾಂಗಣದಲ್ಲಿ ಸೋಮವಾರ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ಸಾಮಾನ್ಯಸಭೆ ನಡೆಯಿತು. ವಿಜಯವಾಣಿ ವರದಿ ಪ್ರಸ್ತಾಪಿಸಿದ ಸದಸ್ಯ ಅಶೋಕ್ ನಾಯ್ಕ, ಮಣಿಪಾಲ, ಇಂದ್ರಾಳಿ ಭಾಗದಲ್ಲಿ ಹೋಟೆಲ್, ಅಪಾರ್ಟ್ಮೆಂಟ್ಗಳಿಂದ ಕೊಳಚೆ ನೀರನ್ನು ಒಳಚರಂಡಿಗೆ ಬಿಡಲಾಗುತ್ತಿದ್ದು, ಇದರಿಂದ ಬಾವಿ ನೀರು ಹಾಳಾಗುತ್ತಿದೆ. ನಗರಸಭೆ ಅಧಿಕಾರಿಗಳು ನೋಟಿಸ್ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಅಧ್ಯಕ್ಷರೇ ಖುದ್ದಾಗಿ ಕಾರ್ಯಾಚರಣೆ ನಡೆಸಬೇಕು. ವ್ಯಾಪಾರ ಮತ್ತು ವಾಸ್ತವ್ಯ ಪರವಾನಿಗೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ನಗರಸಭೆಯ ಸಹಾಯಕ ಅಭಿಯಂತರ ದುರ್ಗಾಪ್ರಸಾದ್ ಉತ್ತರಿಸಿ, ಈಗಾಗಲೇ ಕೆಲವು ಹೋಟೆಲ್, ಅಪಾರ್ಟ್ ಮೆಂಟ್ಗಳಿಗೆ ನೋಟಿಸ್ ಜಾರಿಗೊಳಿಸಿ, 25 ಸಾವಿರ ದಂಡ ವಿಧಿಸಲಾಗಿದೆ. ಕೊಳಚೆ ನೀರಿನ ಪೈಪ್ಗೆ ಎಂಡ್ ಕ್ಯಾಪ್ ಹಾಕಿದರೂ ಪ್ರಯೋಜವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಇದೇ ಪ್ರವೃತ್ತಿ ಮುಂದುವರಿದರೆ ನೀರಿನ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ತಿಳಿಸಿದರು.
ವಿಪಕ್ಷ ನಾಯಕ ರಮೇಶ್ ಕಾಂಚನ್ ಮಾತನಾಡಿ, ಮಳೆಗಾಲ ಆರಂಭ ಆಗುತ್ತಿದೆ. ಮುಂಜಾಗೃತ ಕ್ರಮವಾಗಿ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳ ಗೆಲ್ಲುಗಳನ್ನು ಕಡಿಯಬೇಕು. ನಗರದ ಪ್ರಮುಖ ಜಂಕ್ಷನ್ ಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ತೋಡುಗಳ ಹೂಳೆತ್ತಬೇಕು. ಡಿವೈಡರ್ ಗಳಿಗೆ ಹಾಕಿರುವ ಹೊರ್ಡಿಂಗ್ಸ್ ತೆರವು ಮಾಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಪರಿಸರ ಅಭಿಯಂತರೆ ಸ್ನೇಹ ಅವರು, ಈಗಾಗಲೇ 50 ಮಂದಿ ಸ್ವಚ್ಛತಾ ಸಿಬ್ಬಂದಿಗಳನ್ನು ನೇಮಕ ಮಾಡಿದ್ದೇವೆ. ಅವರು ಚರಂಡಿ ತೋಡುಗಳ ಹೂಳೆತ್ತುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ಡಿವಿಜನ್ ಗೆ 15 ಮಂದಿ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದರು.
ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹ
ಸದಸ್ಯ ಕೃಷ್ಣರಾಜ ಕೊಡಂಚ ಮಾತನಾಡಿ, ಚಿಟ್ಪಾಡಿ ವಾರ್ಡ್ನಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ರಾಜಕಾಲುವೆ ಒತ್ತುವರಿ ಮಾಡಲಾಗಿದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದ್ದು, ಪಕ್ಕದ ಮನೆಗಳಿಗೆ ನೀರು ನುಗ್ಗುತ್ತಿದೆ. ಹೀಗಾಗಿ ತೋಡಿನಲ್ಲಿರು ಕಂಬಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಅಕ್ರಮ ಕಟ್ಟಡದ ಬಗ್ಗೆ ಹಿಂದಿನ ಪೌರಾಯುಕ್ತರು ಇಂಜಿನಿಯರ್ಗಳ ವರದಿಯನ್ನು ಪಡೆಯದೆ ಕೋರ್ಟ್ಗೆ ತಪು$್ಪ ಮಾಹಿತಿ ನೀಡಿದ್ದಾರೆ. ವಸತಿ ಪ್ರದೇಶದಲ್ಲಿ ವಾಣಿಜ್ಯ ಬಳಕೆ ಕಟ್ಟಡ ನಿರ್ಮಾಣವಾಗುತ್ತಿದೆ. ರಾಜಕಾಲುವೆ ಬಳಿ 3 ಮೀಟರ್ ಸೆಟ್ ಬ್ಯಾಕ್ ಬಿಟ್ಟಿಲ್ಲ. ಹೀಗಾಗಿ ಅಧಿಕಾರಿಗಳು ಸೂಕ್ತಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಮಣ್ಣಪಳ್ಳ ನಗರಸಭೆಗೆ ಒಪ್ಪಿಸಿ
ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ನಗರಸಭಾ ವ್ಯಾಪ್ತಿಯಲ್ಲಿರುವ ಮಣ್ಣಪಳ್ಳ ಕೆರೆ ನಿರ್ವಹಣೆಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡುವುದಕ್ಕೆ ನಮ್ಮ ವಿರೋಧವಿದೆ. ಸಿಎಸ್ ಆರ್ ಫಂಡ್ ನಲ್ಲಿ ಅಭಿವೃದ್ಧಿ ಮಾಡಬಹುದು. ಆದರೆ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವಂತಿಲ್ಲ. ಪಾರ್ಕ್, ಮೈದಾನ, ಕೆರೆಯ ನಿರ್ವಹಣೆಯ ಹೊಣೆಯನ್ನು ನಗರಸಭೆಗೆ ನೀಡಬೇಕು. ಇದರಿಂದ ಕೇಂದ್ರ ಸರ್ಕಾರದಿಂದ ನೇರ ಅನುದಾನ ಪಡೆಯಲು ಸಾಧ್ಯವಾಗುತ್ತದೆ ಎಂದರು. ಉಪಾಧ್ಯೆ ರಜನಿ ಹೆಬ್ಬಾರ್, ಸ್ಥಾಯೀ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಪೌರಾಯುಕ್ತ ಡಾ. ಉದಯ್ ಶೆಟ್ಟಿ ಉಪಸ್ಥಿತರಿದ್ದರು.