ಉಡುಪಿ: ಬಸ್ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರು ಬರುತ್ತಿದ್ದು, ಎಪಿಡೆಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.
ಗುರುವಾರ ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಕರೊನಾ ನಿಯಂತ್ರಿಸಲು ದೈಹಿಕ ಅಂತರ ಅವಶ್ಯವಾಗಿದ್ದು, ಬಸ್ಗಳಲ್ಲಿ 30ಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಅವಕಾಶವಿಲ್ಲ. ಸ್ಯಾನಿಟೈಸರ್, ಮಾಸ್ಕ್ ಇಲ್ಲದವರಿಗೆ ಬಸ್ ಹತ್ತಲು ಬಿಡಬೇಡಿ ಎಂದು ಸೂಚಿಸಿದರು. ಬಸ್ಗಳಲ್ಲಿ ಪೀಕ್ ಟೈಮ್ನಲ್ಲಿ ಮಾತ್ರ ಪ್ರಯಾಣಿಕರ ಸಂಖ್ಯೆ ಜಾಸ್ತಿ ಇದ್ದು, ಇತರ ಸಮಯದಲ್ಲಿ ಅತ್ಯಂತ ಕಡಿಮೆ ಇರುತ್ತದೆ. ಪೀಕ್ ಅವರ್ಗಳಲ್ಲಿ ಅಂತರ ಪಾಲನೆ ಕಷ್ಟ ಎಂದು ಬಸ್ ಮಾಲೀಕರು ತಿಳಿಸಿದರು.
ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮಾತನಾಡಿ, ಕರೊನಾದಿಂದ ಬಸ್ ದರ ಹೆಚ್ಚಳ ಮಾಡಿಲ್ಲ, ಬಸ್ ದರ ಹೆಚ್ಚಳ ಕುರಿತಂತೆ ಜನವರಿಯಲ್ಲಿಯೇ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಬಸ್ಗಳಲ್ಲಿ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ಇರುವುದರಿಂದ ಅಷ್ಟೇ ಸೀಟುಗಳ ಲೆಕ್ಕದಲ್ಲಿ ತೆರಿಗೆ ಪಾವತಿಗೆ ಅವಕಾಶ ನೀಡಬೇಕು ಎಂದು ಕೋರಿದರು.
ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಕಾರ್ಯದರ್ಶಿ ಸದಾನಂದ ಛಾತ್ರ, ಉಡುಪಿ ಸರ್ವೀಸ್ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಕರಾವಳಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಶಿರ್ವ ಬಸ್ ಮಾಲೀಕರ ಸಂಘದ ಅಧ್ಯಕ್ಷ ಶಿವರಾಮ ಶೆಟ್ಟಿ ಮತ್ತಿತರರಿದ್ದರು.