ಉಡುಪಿ: ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸೇರ್ಪಡೆಗೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಸಚಿವ ಸಂಪುಟ ಕಸರತ್ತಿಗೆ ಬುಧವಾರ ಮಧ್ಯಾಹ್ನ ಬ್ರೇಕ್ ಬಿದ್ದಿದೆ. ಮೊದಲ ಬಾರಿಗೆ ಶಾಸಕ ಸುನೀಲ್ ಕುಮಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಮೂರನೇ ಬಾರಿ ಮಂತ್ರಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಎಂ.ಕೆ ವಾಸುದೇವ- ಕೆ.ಪಿ ಪ್ರಮೋದ ದಂಪತಿ ಪುತ್ರನಾಗಿ 1975 ಆಗಸ್ಟ್ 15ರಂದು ಜನಿಸಿದ ಸುನೀಲ್ ಕುಮಾರ್ ಕಲಾ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದು, ಬಜರಂಗ ದಳದ ರಾಜ್ಯಾಧ್ಯಕ್ಷರಾಗಿ ದತ್ತಪೀಠ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2004ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ಒಮ್ಮೆ ಸೋಲನುಭವಿಸಿದ್ದು, 2013 ಮತ್ತು 2018ರಲ್ಲಿ ಜಯ ಗಳಿಸಿದ್ದರು. ವಿಧಾನಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಯುವ ನಾಯಕನಾಗಿ ಕಾರ್ಯಕರ್ತರ ವಿಶ್ವಾಸ ಗಳಿಸಿದವರು.
ಕಾಯಕ ನಿಷ್ಠ ಕೋಟ ಶ್ರೀನಿವಾಸ ಪೂಜಾರಿ
ಆರೆಸ್ಸೆಸ್ ಕಾರ್ಯಕರ್ತನಾಗಿ, ಗ್ರಾಪಂ, ತಾಪಂ ಸದಸ್ಯನಾಗಿ ಬಿಜೆಪಿಯಲ್ಲಿ ತಳಮಟ್ಟದಿಂದ ಬೆಳೆದು ಬಂದ ನಾಯಕ. ಸ್ಥಳೀಯ ಸಂಸ್ಥೆಗಳ ಪ್ರಾತಿನಿಧಿಕ ಕ್ಷೇತ್ರದಿಂದ (ಉಡುಪಿ ಮತ್ತು ದಕ್ಷಿಣ ಕನ್ನಡ) ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಎರಡು ಅವಧಿಯಲ್ಲಿ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು, ಹಿಂದುಳಿದ ವರ್ಗಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.