ಬೆಂಗಳೂರು: ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಡಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದ ರಾಜ್ಯ ಸರ್ಕಾರದ ಕ್ರಮ ಇದೀಗವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್ ಫಿಲೋಮನ್ ಯಾಂಗ್ ಅವರಿಂದ ಬಹುಪರಾಕ್ ಗಿಟ್ಟಿಸಿಕೊಂಡಿವೆ.
ಅವರು ಗುರುವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಸಮಾಲೋಚನೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದರು.
ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ಕ್ಯಾಮರೂನ್ ಮೆಚ್ಚುಗೆ ಸೂಚಿಸಿದರು.
ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.
ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ ಯೋಜನೆ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು, ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ, ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಯವರು ನೀಡಿದರು.
ಮಹಿಳೆಯರು ಸ್ವಸಹಾಯ ಗುಂಪುಗಳನ್ನು ಸಂಘಟಿಸಲು, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಾಮಾಜಿಕ- ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯನವರ ಕಾಳಜಿಯನ್ನು ಇದೇ ವೇಳೆ ಶ್ಲಾಘಿಸಿದರು.
ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ. 40 ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ ಕ್ಯಾಮರೂನ್ ಸಂತೋಷ ವ್ಯಕ್ತಪಡಿಸಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಮತ್ತಿತರರು ಈ ವೇಳೆ ಇದ್ದರು