ಹನೂರು: ತಾಲೂಕು ಕೇಂದ್ರ ಹನೂರಿನಲ್ಲಿರುವ ಶ್ರೀ ಮಲೆಮಹದೇಶ್ವರ ಕ್ರೀಡಾಂಗಣವನ್ನು ಮೇಲ್ದರ್ಜೇಗೇರಿಸುವುದರ ಮೂಲಕ ಕ್ರೀಡೆಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ಭರವಸೆ ನೀಡಿದರು.
ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆಯ ಬಳಿ ಶನಿವಾರ ಆಯೋಜಿಸಿದ್ದ ಯೂತ್ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟಿಂಗ್ ಮಾಡುವುದರ ಚಾಲನೆ ನೀಡಿ ಮಾತನಾಡಿದರು.
ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚು ಕ್ರಿಕೆಟ್ ಹಾಗೂ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಿದಂತಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಜತೆಗೆ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವುದರ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಪಟ್ಟಣದ ಶ್ರೀ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಅಗತ್ಯ ಮೂಲ ಸೌಕರ್ಯಗಳು ಇಲ್ಲದಿರುವುದು ನನ್ನ ಗಮನಕ್ಕೆ ಬಂದಿದೆ. ಈ ದಿಸೆಯಲ್ಲಿ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವುದರ ಮೂಲಕ ಕ್ರೀಡಾಂಗಣ ಮೇಲ್ದರ್ಜೇಗೇರಿಸಲು ಕ್ರಮವಹಿಸಲಾಗಿದೆ. ಎಂದು ತಿಳಿಸಿದರು.
ಇದೇ ವೇಳೆ ಪಂದ್ಯಾವಳಿ ಆಯೋಜಕರಿಂದ ಶಾಸಕ ಎಂ.ಆರ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಮಂಜೇಶ್, ರಾಜುಗೌಡ, ರಾಜಣ್ಣ ಹಾಗೂ ತಾಲೂಕಿನ ವಿವಿಧ ಗ್ರಾಮದ ಕ್ರೀಡಾಪಟುಗಳು ಇದ್ದರು.