ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ನಗರದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ ನಿಷ್ಠುರವಾಗಿದ್ದು, ಈ ಪರಂಪರೆಯನ್ನು ಮುಂದುವರೆಸಬೇಕು. ಆಗ ಮಾತ್ರ ಜನಸಾಮಾನ್ಯರಿಗೆ ಸುರಕ್ಷತೆ ಹಾಗೂ ಆತ್ಮಸ್ಥೈರ್ಯ ನೀಡಲು ಸಾಧ್ಯ ಎಂದರು.
ಪೊಲೀಸರು ಕಾನೂನು ಸುವ್ಯವಸ್ಥೆಯ ಜತೆಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಜನರ ಸೇವೆ ಮಾಡಲು ಪೊಲೀಸರಿಗೆ ಅಧಿಕಾರವನ್ನು ನೀಡಲಾಗಿದೆ. ಈ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡುವ ಜವಾಬ್ದಾರಿ ಅವರ ಮೇಲಿದೆ. ಜನ ಸಾಮಾನ್ಯರನ್ನು ಮತ್ತು ತಮ್ಮ ಅಧೀನದಲ್ಲಿ ಕೆಲಸ ಮಾಡುವ ಪೇದೆಗಳನ್ನೂ ಸಹ ಗೌರವದಿಂದ ನಡೆಸಿಕೊಳ್ಳಬೇಕು. ಅವರೊಂದಿಗೆ ವ್ಯವಹರಿಸುವಾಗ ಭಾಷೆ ನಿಯಂತ್ರಣದಲ್ಲಿರಲಿ ಎಂದರು. ಇಲಾಖೆಯ ಎಲ್ಲ ಹಂತಗಳಲ್ಲಿಯೂ ವರದಿ ಮಾಡುವ ವ್ಯವಸ್ಥೆ ಉತ್ತಮವಾಗಿರಬೇಕು. ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಹಿರಿಯ ಅಧಿಕಾರಿಗಳು ಸುದೀರ್ಘವಾಗಿ ಪರಿಶೀಲಿಸಬೇಕು. ಇಲಾಖೆಯ ಆಂತರಿಕ ಭದ್ರತಾ ವಿಭಾಗವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತನ್ನ ಕಾರ್ಯವೈಖರಿಯನ್ನು ಇನ್ನಷ್ಟು ವಿಸ್ತರಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆ(ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್)ಗೆ ಚಾಲನೆ ನೀಡಲಾಯಿತು. ಕರ್ನಾಟಕ ರಾಜ್ಯ ಪೊಲೀಸ್ ಕಾಫಿ ಟೇಬಲ್ ಬುಕ್ – ಸೇವೆಯಲ್ಲಿದ್ದಾಗ ಮರಣ ಹೊಂದಿದ ಇಲಾಖೆಯ ನೌಕರರಿಗೆ ಒದಗಿಸಿರುವ ಪರಿಹಾರದ ಕುರಿತ ಕಿರುಪುಸ್ತಕವನ್ನು ಸಿಎಂ ಬೊಮ್ಮಾಯಿ ಬಿಡುಗಡೆ ಮಾಡಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ವೇದಿಕೆಯಲ್ಲಿದ್ದರು. ಸಮಾವೇಶದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡರು.
ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ‘ಛಾತ್ರ ವಿಶ್ವಕರ್ಮ’ ಪ್ರಶಸ್ತಿ